ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ಆಹಾರ ಇಲಾಖೆ ದಾಳಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲು!
ಕರ್ನಾಟಕದ 36ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸುರಕ್ಷತಾ ಇಲಾಖೆ ನಡೆಸಿದ ದಾಳಿಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಕೆ.ಆರ್. ಪುರಂ, ಮೈಸೂರು, ಹಾವೇರಿ ಸೇರಿದಂತೆ ಹಲವು ಕಡೆ ಕಳಪೆ ಗುಣಮಟ್ಟದ, ಅಸ್ವಚ್ಛ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಇಲಾಖೆ ಕ್ಯಾಂಟೀನ್ ಮಾಲೀಕರುಗಳಿಗೆ ನೋಟಿಸ್ ನೀಡಿದೆ.
ಬೆಂಗಳೂರು, ಆಗಸ್ಟ್ 20: ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಮೆಗಾ ದಾಳಿಯಲ್ಲಿ ಹಲವು ಆಘಾತಕಾರಿ ಸಂಗತಿಗಳು ಬಯಲಾಗಿದೆ. ಬೆಂಗಳೂರಿನ ಕೆ.ಆರ್. ಪುರಂ ರೈಲು ನಿಲ್ದಾಣದ ಕ್ಯಾಂಟೀನ್ಗಳಲ್ಲಿ ಸಂಪೂರ್ಣ ಅನೈರ್ಮಲ್ಯದ ವಾತಾವರಣ ಕಂಡುಬಂದರೆ, ಮೈಸೂರು ರೈಲು ನಿಲ್ದಾಣದಲ್ಲಿ ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿರುವುದು ಹಾಗೂ ಕರಿದ ವಡೆಗಳನ್ನು ಪತ್ರಿಕೆಗಳ ಮೇಲೆ ಇಟ್ಟು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲದೆ, ಹಾವೇರಿ ನಿಲ್ದಾಣದಲ್ಲಿ ಅವಧಿ ಮೀರಿದ ಹಾಲು-ಮೊಸರು ಮತ್ತು ಶಿಲೀಂಧ್ರ ಹಿಡಿದ ತರಕಾರಿಗಳನ್ನು ಅಡುಗೆಗೆ ಬಳಸುತ್ತಿರುವುದು ಹಾಗೂ ಜಿಲೇಬಿಗಳಲ್ಲಿ ನಿಷೇಧಿತ ಕೃತಕ ಬಣ್ಣಗಳನ್ನು ಬೆರೆಸಿರುವುದು ಪತ್ತೆಯಾಗಿದೆ. ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹ ಮಳಿಗೆಗಳ ಮಾಲೀಕರಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ಖಡಕ್ ನೋಟಿಸ್ ಜಾರಿ ಮಾಡಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

