ವೀರಪ್ಪ ಮೊಯ್ಲಿ ಮತ್ತು ಪ್ರದೀಪ್ ಈಶ್ವರ್ ಇಂದು ಬೆಂಗಳೂರಲ್ಲಿ ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿದ್ದು ಯಾಕೆ?

Updated on: Jan 17, 2024 | 5:57 PM

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮೊಯ್ಲಿ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ. ಮೊಯ್ಲಿ ಅವರಿಗೀಗ 84ರ ಇಳಿಪ್ರಾಯ. ಹಾಗೆ ನೋಡಿದರೆ, ಕಾಂಗ್ರೆಸ್ ಪಕ್ಷದಲ್ಲಿ ವಯಸ್ಸನ್ನು ಗಂಭೀರವಾಗಿ ಪರಿಗಣಿಸುವ ಪರಿಪಾಠ ಇಲ್ಲ. ಅವರನ್ನು ಬಿಟ್ಟರೆ ಬೇರೆ ಯಾರು ಅಂತ ಪ್ರಶ್ನೆ ಉದ್ಭವಿಸುತ್ತದೆ.

ಬೆಂಗಳೂರು: ಚಿಕ್ಕಬಳ್ಳಾಪುರದ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷರನ್ನು ಒಬ್ಬರ ನಂತರ ಮತ್ತೊಬ್ಬರು ಭೇಟಿಯಾಗುತ್ತಿರುವುದು ಆಶ್ಚರ್ಯ ಹುಟ್ಟಿಸುತ್ತಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಮತ್ತು ಸಾಹಿತಿಯೂ ಆಗಿರುವ ವೀರಪ್ಪ ಮೊಯ್ಲಿ (Veerappa Moily) ಅವರು ಇಂದು ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿ ತೆರಳಿದ ಬಳಿಕ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸಹ ಉಪ ಮುಖ್ಯಮಂತ್ರಿಯನ್ನು ಬೇಟಿಯಾದರು. ಲೋಕಸಭಾ ಚುನಾವಣೆಗೆ ರಂಗ ಸಜ್ಜಾಗುತ್ತಿದೆ ಮತ್ತು ಎಲ್ಲ ಪಕ್ಷಗಳು ತಮ್ಮ ತಮ್ಮ ತಯಾರಿಯಲ್ಲಿ ತೊಡಗಿವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮೊಯ್ಲಿ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ. ಮೊಯ್ಲಿ ಅವರಿಗೀಗ 84ರ ಇಳಿಪ್ರಾಯ. ಹಾಗೆ ನೋಡಿದರೆ, ಕಾಂಗ್ರೆಸ್ ಪಕ್ಷದಲ್ಲಿ ವಯಸ್ಸನ್ನು ಗಂಭೀರವಾಗಿ ಪರಿಗಣಿಸುವ ಪರಿಪಾಠ ಇಲ್ಲ. ಅವರನ್ನು ಬಿಟ್ಟರೆ ಬೇರೆ ಯಾರು ಅಂತ ಪ್ರಶ್ನೆ ಉದ್ಭವಿಸುತ್ತದೆ. ಮಾಜಿ ಅರೋಗ್ಯ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ರಂಗ ಪ್ರವೇಶಿಸಿದರೆ ತಾನು ಅವರ ವಿರುದ್ಧ ಖಂಡಿತ ಸ್ಪರ್ಧಿಸುವುದಾಗಿ ಈಶ್ವರ್ ಹೇಳುತ್ತಾರೆ. ಆದರೆ, ಇವತ್ತು ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಬೇರೆ ಕಾರಣಕ್ಕೆ ಎಂದು ಅವರು ಹೇಳಿದ್ದಾರೆ. ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ಬಳಿಕ ಮೊಯ್ಲಿ ಮಾಧ್ಯಮಗಳೊಂದಿಗೆ ಮಾತಾಡದೆ ಧಾವಂತದಲ್ಲಿ ಕಾರುಹತ್ತಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More