ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ?: ಮೋದಿ-ಕೇಂದ್ರ ಸಚಿವರ ಭೇಟಿ ಬೆನ್ನಲ್ಲೇ ಹೆಚ್ಚಿದ ಚರ್ಚೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮರಳಿ ರಾಜ್ಯ ರಾಜಕಾರಣಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಅವರು ಸುದೀರ್ಘ ಮಾತುಕತೆ ನಡೆಸಿರೋದು ಇದಕ್ಕೆ ಮತ್ತಷ್ಟು ಇಂಬು ನೀಡುವಂತಿದೆ. ರಾಜ್ಯದಲ್ಲಿ ಎನ್ಡಿಎ ಬಲವರ್ಧನೆ ಜೊತೆಗೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಹೆಚ್ಚಿಸಲು ಜಂಟಿ ಹೋರಾಟಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು, ಆಗಸ್ಟ್ 28: ರಾಜ್ಯ ರಾಜಕಾರಣಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರೀ-ಎಂಟ್ರಿ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದು, ಈ ನಡುವೆ ಪ್ರಧಾನಿ ಮೋದಿ ಅವರ ಜೊತೆಗೆ ಹೆಚ್ಡಿಕೆ ಮಹತ್ವದ ಮಾತುಕತೆ ನಡೆಸಿರೋದು ಕುತೂಹಲ ಮೂಡಿಸಿದೆ. ಮತ್ತೆ ಕರ್ನಾಟಕಕ್ಕೆ ಮರಳುವ ವಿಚಾರ, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ, ಸೂಕ್ತ ಸಮಯ ಬಂದಾಗ ನಿರ್ಧಾರ ಮಾಡೋಣ ಎಂದು ಪ್ರಧಾನಿ ಮೋದಿ ಕೇಂದ್ರ ಸಚಿವರಿಗೆ ತಿಳಿಸಿರೋದಾಗಿ ಮಾಹಿತಿ ಇದೆ. ನೈಸ್ ಯೋಜನೆ, ಬಿಡದಿ ಟೌನ್ಶಿಪ್ ಹಾಗೂ ನಾಗೇಂದ್ರ ವಿರುದ್ಧದ ಹೋರಾಟ ಸೇರಿ ಹಲವು ವಿಚಾರಗಳ ಬಗ್ಗೆ ಕುಮಾರಸ್ವಾಮಿ ಪ್ರಧಾನಿ ಎದುರು ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಎನ್ಡಿಎ ಬಲವರ್ಧನೆ ಜೊತೆಗೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಹೆಚ್ಚಿಸಲು ಜಂಟಿ ಹೋರಾಟಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೈತ್ರಿಯತ್ತ ಯುವಕರನ್ನು ಸೆಳೆಯಲು ಕಾರ್ಯತಂತ್ರ ದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
