Hasanamba Temple: ಭಕ್ತರ ದರ್ಶನಕ್ಕೆ ತೆರೆದ ಹಾಸನಾಂಬೆ ದೇಗುಲ

Updated By: Ganapathi Sharma

Updated on: Oct 09, 2025 | 2:44 PM

ಹಾಸನಾಂಬೆ ದೇಗುಲದ ಬಾಗಿಲು ಭಕ್ತರಿಗಾಗಿ ತೆರೆದಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಆದಿಚುಂಚನಗಿರಿ ಹಾಗೂ ಸಿದ್ದಗಂಗಾ ಮಠದ ಶ್ರೀಗಳು, ಸಚಿವರು, ಶಾಸಕರು ಮತ್ತು ಸಂಸದರು ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಅಕ್ಟೋಬರ್ 23ರವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಾಸನ, ಅಕ್ಟೋಬರ್ 9: ವರ್ಷಕ್ಕೊಮ್ಮೆ ಭಕ್ತರಿಗಾಗಿ ತೆರೆಯಲ್ಪಡುವ ಹಾಸನಾಂಬೆ ದೇಗುಲದ ಬಾಗಿಲನ್ನು ಗುರುವಾರ ತೆರೆಯಲಾಯಿತು. ಲಕ್ಷಾಂತರ ಭಕ್ತರು ಹಾಸನಾಂಬೆಯ ದರ್ಶನ ಪಡೆಯಲು ಕಾತರದಿಂದ ಕಾಯುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಜನರು ಆಗಮಿಸಿದ್ದಾರೆ. ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳೊಂದಿಗೆ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಹಾಗೂ ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇಂದಿನಿಂದ ಅಕ್ಟೋಬರ್ 23ರವರೆಗೆ, ಕೊನೆಯ ಮೂರು ದಿನಗಳನ್ನು ಹೊರತುಪಡಿಸಿ, ಒಟ್ಟು 13 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದರು, ಈ ಬಾರಿ 25 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆ ಇದೆ. ಜಿಲ್ಲಾಡಳಿತ ಭಕ್ತರಿಗಾಗಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 09, 2025 02:43 PM