ಹಾವೇರಿ: ಶಿಗ್ಗಾಂವಿ ಗುತ್ತಿಗೆದಾರನ ಕೊಲೆ ಪ್ರಕರಣ, ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು

Updated on: Jun 25, 2025 | 8:07 AM

ಹಾವೇರಿಯ ಶಿಗ್ಗಾಂವಿಯಲ್ಲಿ ಮಂಗಳವಾರ ನಡೆದ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆಗೆ ಪ್ರತೀಕಾರವಾಗಿ ಒಬ್ಬ ಆರೋಪಿಯ ಮನೆಗೆ ಮೃತನ ಸಂಬಂಧಿಕರು ಬೆಂಕಿ ಹಚ್ಚಿದ್ದಾರೆ. ಮಂಗಳವಾರ ರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ. ಸಾವು-ನೋವು ಸಂಭವಿಸಿಲ್ಲ. ವಿಡಿಯೋ ಇಲ್ಲಿದೆ.

ಹಾವೇರಿ, ಜೂನ್ 25: ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಕೊಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುವ ಸುಳಿವು ದೊರೆತಿದೆ. ಹತ್ಯೆಯ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಶಿವಾನಂದ ಕುನ್ನೂರು ಸಂಬಂಧಿಕರು ಕೊಲೆ ಆರೋಪಿಗಳ ಪೈಕಿ ಒಬ್ಬನಾದ ನಾಗರಾಜ್ ಸವದತ್ತಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ಸಾವು-ನೋವು ಸಂಭವಿಸಿಲ್ಲ. ಇಷ್ಟೇ ಅಲ್ಲದೆ, ಸಂಬಂಧಿಕರು ಉಳಿದ ನಾಲ್ವರು ಆರೋಪಿಗಳ ಮೇಲೂ ಪ್ರತೀಕಾರ ತೀರಿಸಿಕೊಳ್ಳುವ ಶಪಥ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿಗ್ಗಾಂವಿಯಲ್ಲಿ ಪೊಲೀಸ್ ಬಿಗಿಭದ್ರತೆ ಕಲ್ಪಿಸಲಾಗಿದೆ.

5 ಜನ ಸಿಪಿಐ, 7 ಪಿಎಸ್ಐ , 2 ಡಿ‌.ಆರ್. ವಾಹನ ಸೇರಿದಂತೆ 20 ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ಮೂರು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸದ್ಯ, ಹತ್ಯೆಯಾದ ಶಿವಾನಂದ ಕುನ್ನೂರ ಪತ್ನಿ ನಾಗರತ್ನಾ ಪೊಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9, ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More