ಇಂದು ಮಧ್ಯಾಹ್ನ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ, 4 ಸಾವಿರ ಆಸನ ವ್ಯವಸ್ಥೆ: ಜೋಶಿ ಸೇರಿ ಪ್ರಮುಖ ಬಿಜೆಪಿ ನಾಯಕರು ಭಾಗಿ
HD Deve Gowda Wife Chennamma Last Rituals: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9:30ರವರೆಗೆ ರೇವಣ್ಣ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಮಾವಿನಕೆರೆಗೆ ಕೊಂಡೊಯ್ಯಲಾಗುವುದು. ಸಾರ್ವಜನಿಕರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ.
ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಅಂತ್ಯಕ್ರಿಯೆಗೆ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಮಾವಿನಕೆರೆಯಲ್ಲಿ ಸುಮಾರು 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಮೈಸೂರಿನಿಂದ ಕುರ್ಚಿಗಳನ್ನು ತರಿಸಲಾಗಿದ್ದು, ಶಾಮಿಯಾನ ಹಾಗೂ ವಿದ್ಯುತ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ವಿವಿಧ ಭಾಗಗಳ ಜನಪ್ರತಿನಿಧಿಗಳು ಭಾಗಿಯಾಗುವ ಸಾಧ್ಯತೆ ಇದೆ.
ಬೆಳಗ್ಗೆ 9:30ರವರೆಗೆ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಮಾವಿನಕೆರೆಗೆ ಸಾಗಲಿದೆ. ಮಾರ್ಗಮಧ್ಯೆಯೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರ ಮಾವಿನಕೆರೆಗೆ ತಲುಪಲಿದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಜಕೀಯ ಗಣ್ಯರು ಹಾಗೂ ಕುಟುಂಬದ ಅತ್ಯಾಪ್ತರು ಅಂತಿಮ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಅಂತ್ಯಕ್ರಿಯೆಯಲ್ಲಿ ಪ್ರಮುಖ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ ಲಾಲ್ ಖಟ್ಟರ್, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಭಾಗಿಯಾಗಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
