ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ ಕುಮಾರಸ್ವಾಮಿ

Updated on: Aug 31, 2026 | 3:38 PM

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೆಪಿಎಸ್‌ಸಿ ಅಕ್ರಮದ ಕುರಿತು ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ನೇಮಕಾತಿ ಅಕ್ರಮ, ಓಎಂಆರ್ ಶೀಟ್ ವಿಷಯ, ಹಾಗೂ ಆರೋಪಿ ಜ್ಞಾನೇಂದ್ರ ಕುಮಾರ್ ವಿಚಾರದಲ್ಲಿ ಖರ್ಗೆ ಅವರ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಿಸಿದ ಕುಮಾರಸ್ವಾಮಿ, ಖರ್ಗೆ ಸತ್ಯ ಮರೆಮಾಚುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ, ಆಗಸ್ಟ್​ 31: ದೆಹಲಿಯ ಕುಶಕ್ ರಸ್ತೆಯಲ್ಲಿರುವ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಸತ್ಯವನ್ನು ಹೊರಗೆಡಹುವಂತೆ ಮತ್ತು ಪ್ರಕರಣದ ಕುರಿತು ಅಕೌಂಟೆಬಿಲಿಟಿ ನೀಡುವಂತೆ ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ‘ಕೆಪಿಎಸ್‌ಸಿ ಅಕ್ರಮ ಜಗಜ್ಜಾಹೀರಾಗಿದ್ದರೂ ಸರ್ಕಾರ ಸೂಕ್ತ ತನಿಖೆ ನಡೆಸದೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ಜ್ಞಾನೇಂದ್ರ ಕುಮಾರ್‌ನನ್ನು ಇ.ಡಿ ತನಿಖೆಯಿಂದ ರಕ್ಷಿಸಲು ದೇವನಹಳ್ಳಿಯ ರೆಸಾರ್ಟ್‌ನಲ್ಲಿಟ್ಟು ರಾಜಾತಿಥ್ಯ ನೀಡಲಾಗಿತ್ತು ಹಾಗೂ ಆತ ಸಿಐಡಿಗೆ ಶರಣಾಗಿದ್ದರೂ ಉತ್ತರ ಪ್ರದೇಶದಿಂದ ಬಂಧಿಸಿ ಕರೆತರಲಾಗಿದೆ ಎಂದು ಸುಳ್ಳು ಕಥೆ ಕಟ್ಟಲಾಗುತ್ತಿದೆ. ಹೈಕೋರ್ಟ್ ಸಹ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಪ್ರಸ್ತಾಪಿಸಿರುವಾಗ, ಸರ್ಕಾರ ಇನ್ನೂ ಸತ್ಯ ಮುಚ್ಚಿಡುತ್ತಿದ್ದು, ಸಚಿವರ ನೇರ ಪಾತ್ರದ ಬಗ್ಗೆ ತನಿಖೆಯಾಗಲಿ’ ಎಂದು ದಾಖಲೆಗಳ ಸಮೇತ ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us