ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ: ಕಣ್ಣೀರಿಟ್ಟು ತಿರುಗೇಟು ನೀಡಿದ ಡಿಸಿ ಲತಾ ಕುಮಾರಿ!

Edited By:

Updated on: Aug 24, 2026 | 11:51 AM

ಗ್ರಾಮ ಪಂಚಾಯತಿ ಚುನಾವಣೆಗೆ ಮೀಸಲಾತಿ ನಿಗದಿಪಡಿಸುವ ಸಂಬಂಧ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಾರ್ಯವೈಖರಿ ಕುರಿತು ತೀವ್ರ ಟೀಕೆ ಮಾಡಿದ ರೇವಣ್ಣ ಅವರ ಹೇಳಿಕೆ ಬಳಿಕ, "ನಿಮ್ಮನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ದ್ವೇಷಿಸುತ್ತಾರೆ" ಎಂದು ಡಿಸಿ ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.

ಹಾಸನ, ಆಗಸ್ಟ್ 24: ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವಿನ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸಲಾತಿ ಪಟ್ಟಿ ಪ್ರಕಟಣೆಯಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಮತ್ತು ಕಡತಗಳನ್ನು ಬಾಕಿ ಇರಿಸಲಾಗಿದೆ ಎಂದು ರೇವಣ್ಣ ಕೀಳಾಗಿ ಆರೋಪಿಸಿದ್ದರು. “ಇಂಥ ಡಿಸಿಯನ್ನು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಗೊತ್ತಿಲ್ಲ” ಎಂದು ಬಹಿರಂಗವಾಗಿ ಹಗುರವಾಗಿ ಮಾತನಾಡಿದ್ದರು.

ರೇವಣ್ಣ ಅವರ ಈ ಹೇಳಿಕೆಗಳ ಬೆನ್ನಲ್ಲೇ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. “ನಿಮ್ಮನ್ನು ಹಿಡಿದಿಟ್ಟುಕೊಳ್ಳುವುದಕ್ಕೆ, ಹಿಡಿತದಲ್ಲಿಟ್ಟುಕೊಳ್ಳುವುದಕ್ಕೆ ಆಗಲಿಲ್ಲ ಅಂತಂದ್ರೆ ದ್ವೇಷಿಸುತ್ತಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಭಾವುಕರಾಗಿ ತಿರುಗೇಟು ನೀಡಿದ್ದಾರೆ. “ನಾವು ನಿಯಮ ಮೀರಿದ್ದರೆ ಕಾನೂನಿನಲ್ಲಿ ಅವಕಾಶವಿದೆ, ಪತ್ರ ಬರೆಯಬಹುದಿತ್ತು. ಆದರೆ ಇಷ್ಟು ತುಚ್ಛವಾಗಿ, ಮಾನಸಿಕವಾಗಿ ನೋವಾಗುವಂತೆ ಮಾತನಾಡುವುದು ಹಿರಿಯ ರಾಜಕಾರಣಿಗೆ ಶೋಭೆಯಲ್ಲ. ಡಿಸಿ ಸ್ಥಾನದಲ್ಲಿದ್ದರೂ ಗೌರವ ಸಿಗುವುದಿಲ್ಲ ಎಂದರೆ ಹೇಗೆ?” ಎಂದು ಕಣ್ಣೀರಿಟ್ಟು ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us