ಸಾಲು ಸಾಲು ರಜೆ ಎಫೆಕ್ಟ್: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮುಖ್ಯಾಂಶಗಳು
- ಮೊಹರಂ ಪ್ರಯುಕ್ತ ಇಂದು ರಜೆ
- ಶನಿವಾರ, ಭಾನುವಾರ ವಾರಾಂತ್ಯದ ರಜೆ
- ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜನಸಾಗರ
ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತರು ಮತ್ತು ಪ್ರವಾಸಿಗರ ಸಾಗರವೇ ಹರಿದುಬಂದಿದೆ. ಶುಕ್ರವಾರವೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರು ಗೋಪಾಲಸ್ವಾಮಿ ದೇವರ ದರ್ಶನ ಪಡೆದು, ಬೆಟ್ಟದ ಮೇಲಿನ ಆಹ್ಲಾದಕರ ಹವಾಮಾನ ಹಾಗೂ ಹಸಿರಿನ ಪ್ರಕೃತಿ ಸೌಂದರ್ಯವನ್ನು ಸವಿದು ಸಂಭ್ರಮಿಸಿದರು.
ಚಾಮರಾಜನಗರ, ಜೂನ್ 26: ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರ ದಂಡು ಕಾಣಿಸಿಕೊಂಡಿದೆ. ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ತಾಣವಾದ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಶುಕ್ರವಾರವೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮತ್ತು ಪ್ರವಾಸಿಗರು ಹರಿದುಬಂದಿದ್ದಾರೆ. ಹಚ್ಚ ಹಸಿರಿನ ಪ್ರಕೃತಿಯ ಮಡಿಲಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ, ನೆರೆಯ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಂದಲೂ ಸಾವಿರಾರು ಪ್ರವಾಸಿಗರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಬೆಟ್ಟದ ಮೇಲೆ ಬಿಳಿ ಹೊದಿಕೆಯಂತೆ ಆವರಿಸಿರುವ ಹಿಮ ಮತ್ತು ಅಲ್ಲಿನ ತಂಪಾದ, ಆಹ್ಲಾದಕರ ವಾತಾವರಣ ಪ್ರವಾಸಿಗರ ಮನ ಸೆಳೆಯುತ್ತಿದೆ. ಆಗಮಿಸಿದ ಭಕ್ತರು ಶ್ರೀ ಸಂತಾನ ಗೋಪಾಲಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ನಂತರ ಬೆಟ್ಟದ ಅದ್ಭುತ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಂಡು ಆನಂದಿಸುತ್ತಿದ್ದಾರೆ.
ಒಂದೇ ಬಾರಿಗೆ ಭಕ್ತರು ಹಾಗೂ ಪ್ರವಾಸಿಗರ ದಟ್ಟಣೆ ಹೆಚ್ಚಾಗಿರುವುದರಿಂದ ದೇವಾಲಯದ ಆವರಣ ಹಾಗೂ ಬೆಟ್ಟಕ್ಕೆ ಸಾಗುವ ಮಾರ್ಗದಲ್ಲಿ ವಾಹನಗಳ ಸಂಚಾರ ಗಣನೀಯವಾಗಿ ಹೆಚ್ಚಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
