ತಾರಕಕ್ಕೇರಿದ ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಇಂದು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ನಿಷೇಧಾಜ್ಞೆ ಜಾರಿ

Edited By:

Updated on: Aug 22, 2026 | 6:46 AM

ಹುಬ್ಬಳ್ಳಿಯ ಆಸರ ಓಣಿಯ ಪುಷ್ಕರಣಿ ಮೇಲೆ ರಸ್ತೆ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಕರೆ ಕೊಟ್ಟಿವೆ. ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ಅಕ್ರಮ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ನಿಷೇಧಾಜ್ಞೆ ಜಾರಿಗೊಳಿಸಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದಲಿತ ಮತ್ತು ಮುಸ್ಲಿಂ ಸಂಘಟನೆಗಳು ರಸ್ತೆ ಕಿತ್ತುಹಾಕಲು ಬಿಡುವುದಿಲ್ಲ ಎಂದು ಹೇಳಿವೆ.

ಹುಬ್ಬಳ್ಳಿ, ಆಗಸ್ಟ್ 22: ಹುಬ್ಬಳ್ಳಿಯ ಆಸರ ಓಣಿಯಲ್ಲಿ ಪುಷ್ಕರಣಿಯ ಮೇಲೆ ರಸ್ತೆ ನಿರ್ಮಾಣ ಮಾಡುವ ವಿಚಾರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ರಸ್ತೆ ನಿರ್ಮಾಣವನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹಿಂದೂ ಸಂಘಟನೆಗಳ ಪ್ರಕಾರ, ರಸ್ತೆ ನಿರ್ಮಿಸುತ್ತಿರುವ ಜಾಗದಲ್ಲಿ ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಇದೆ. ಪಾಲಿಕೆಯಿಂದ ಇದೇ ತಿಂಗಳು ಈ ಜಾಗದಲ್ಲಿ ರಸ್ತೆ ನಿರ್ಮಿಸುತ್ತಿರುವುದನ್ನು ಹಿಂದೂಪರ ಸಂಘಟನೆಗಳು ಖಂಡಿಸಿವೆ. ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗುತ್ತಿದ್ದು, ಅದನ್ನು ಕಿತ್ತು ಹಾಕುವುದಾಗಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಆದರೆ, ರಸ್ತೆ ಕಿತ್ತು ಹಾಕಲು ಬಿಡುವುದಿಲ್ಲ ಎಂದು ದಲಿತ ಮತ್ತು ಮುಸ್ಲಿಂ ಸಂಘಟನೆಗಳು ಹೇಳಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us