‘ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’; ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು, ವರಿಷ್ಠರು ನೀಟ್ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಶನಿವಾರ ಅಥವಾ ಭಾನುವಾರ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಹೇಳಿದ ಅವರು, ನೀಟ್ ಪ್ರತಿಭಟನೆ ವೇಳೆ ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದ್ದಾರೆ.
ದೆಹಲಿ, ಜುಲೈ 22: ‘ಎರಡು ಡಿಸಿಎಂ ಹುದ್ದೆಗಳ ಸೃಷ್ಟಿ ಹೈಕಮಾಂಡ್ ತೀರ್ಮಾನ. ನಾನು ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ಇದೆ. ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಡಿಸಿಎಂ ಹುದ್ದೆಗಳ ಸೃಷ್ಟಿ ಅದು ಪಕ್ಷದ ತೀರ್ಮಾನ, ನಾನು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ’ ಎಂದರು. ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್ ನಾಯಕರು ನೀಟ್ ವಿರುದ್ಧದ ಪ್ರತಿಭಟನೆಯಲ್ಲಿದ್ದಾರೆ. ಆ ಪ್ರತಿಭಟನೆ ಕೂಡ ದೇಶಕ್ಕೆ ಮುಖ್ಯವಾಗಿತ್ತು. ಹಾಗಾಗಿ ನಿನ್ನೆ ಸಂಪುಟ ವಿಸ್ತರಣೆ ಬಗ್ಗೆ ಸಭೆ ನಡೆಸಲು ಸಾಧ್ಯವಾಗಿಲ್ಲ. ಶನಿವಾರ ಅಥವಾ ಭಾನುವಾರ ನಾಯಕರನ್ನು ಮತ್ತೆ ಕರೆಯಬಹುದು’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
