ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ನನ್ನ ಹೆಸರು ಸೂಚಿಸಿದರೆ ಬೇಡ ಅನ್ನಲಾಗುತ್ತದೆಯೇ? ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 03, 2023 | 12:15 PM

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಅಂತ ಅವರು ಬೆಂಗಳೂರಲ್ಲಿ ಹೇಳಿದ್ದರು.

ಮೈಸೂರು: ಸಿದ್ದರಾಮಯ್ಯ (Siddaramaiah) ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಅಥವಾ ಇನ್ನೆರಡು ವರ್ಷಗಳ ಬಳಿಕ ಅವರನ್ನು ತೆರೆಮರೆಗೆ ಸರಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ಬಡ್ತಿ ನೀಡಲಾಗುತ್ತಾ? ಮಾಧ್ಯಮ ಪ್ರತಿನಿಧಿಗಳು ಮತ್ತೊಮ್ಮೆ ಈ ಪ್ರಶ್ನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಮೈಸೂರಲ್ಲಿ ಇಂದು ಕೇಳಿದರು. ಕೊಂಚ ಅಸಹನೆಯಿಂದ ಪ್ರತಿಕ್ರಿಯಿಸಿದ ಸಚಿವ, ಈ ಸಂಗತಿ ಕೇವಲ ನಾಲ್ವರಿಗೆ ಮಾತ್ರ ಗೊತ್ತು, ಇದಕ್ಕೂ ಮೊದಲು ಸಹ ತಾನದನ್ನು ಹೇಳಿದ್ದೇನೆ ಎಂದರು. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಅಂತ ಅವರು ಬೆಂಗಳೂರಲ್ಲಿ ಹೇಳಿದ್ದರು. ಅದೇ ಮಾತನ್ನು ಮೈಸೂರಲ್ಲಿ ಪುನರಾವರ್ತಿಸಿದ ಪ್ರಿಯಾಂಕ್ ಖರ್ಗೆ, ಅದು ಹೈಕಮಾಂಡ್ ಸುಪರ್ದಿಗೆ ಬಿಟ್ಟ ವಿಚಾರ, ಹೈಕಮಾಂಡ್ ತನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೂಚಿಸಿದರೆ ತಾನದಕ್ಕೆ ಬದ್ಧನಾಗಿರಬೇಕಾಗುತ್ತದೆ ಎಂದು ನಗುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.