ಫುಟ್ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್ನಲ್ಲಿ ಹೈಡ್ರಾಮಾ: ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶುರುವಾಗಿದೆ. ಈ ವೇಳೆ ನಗರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳು ವಾಗ್ವಾದಕ್ಕಿಳಿದು, ತಮ್ಮ ಅಂಗಡಿಗಳನ್ನು ತೆರವುಗೊಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬಳಿಕ ಅವರ ಸಮ್ಮುಖದಲ್ಲಿಯೇ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಬಾಗಲಕೋಟೆ, ಮೇ 09: ಇಳಕಲ್ ನಗರದಲ್ಲಿ ಫುಟ್ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಯು ಆರಂಭಗೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಗರದಲ್ಲಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯನ್ನು ನಗರಸಭೆ ಅಧಿಕಾರಿಗಳು ಹಮ್ಮಿಕೊಂಡಿದ್ದರು. ಆದರೆ, ಈ ಕ್ರಮದಿಂದ ತಮ್ಮ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ವ್ಯಾಪಾರಿಗಳು, ನಗರಸಭೆ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಿಕೊಂಡರೂ ಅಧಿಕಾರಿಗಳು ಕ್ರಮ ಕೈಗೊಂಡಾಗ, ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳನ್ನು ತೆರವುಗೊಳಿಸಿದರೆ, ತಾವು ವಿಷ ಕುಡಿದು ಸಾಯಬೇಕಾಗುತ್ತದೆ. ತಮ್ಮ ಸಾವಿಗೆ ನಗರಸಭೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ವ್ಯಾಪಾರಿಗಳ ಪ್ರತಿಭಟನೆ ತೀವ್ರಗೊಂಡು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣಗಳು ಕಂಡುಬಂದ ಬೆನ್ನಲ್ಲೇ ಇಳಕಲ್ ನಗರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದು, ಬಳಿಕ ಅವರ ಭದ್ರತೆಯಲ್ಲಿಯೇ ಕಾರ್ಯಾಚರಣೆ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

