ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ: ತಕ್ಷಣದ ಕ್ರಮಕ್ಕೆ ವಿಪಕ್ಷಗಳ ಒತ್ತಾಯ
ಕರ್ನಾಟಕದಲ್ಲಿ ಬೀದಿ ನಾಯಿಗಳ ಕಾಟದ ಬಗ್ಗೆ ವಿಪಕ್ಷಗಳು ವಿಧಾನಸಭೆಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿವೆ. ಬೆಂಗಳೂರಿನಲ್ಲಿ ಕಳೆದ ಆರು ತಿಂಗಳಲ್ಲಿ 18,000 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಉಲ್ಲೇಖಿಸಿ, ಈ ಸಮಸ್ಯೆಗೆ ತಕ್ಷಣದ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ.
ಬೆಂಗಳೂರು, ಆಗಸ್ಟ್ 13: ಬೀದಿ ನಾಯಿಗಳ ಕಾಟ, ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮತ್ತು ಸುಪ್ರೀಂ ಕೋರ್ಟ್ ದೆಹಲಿಗೆ ನೀಡಿರುವ ನಿರ್ದೇಶನದ ಬಗ್ಗೆ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಕೂಡ ಬುಧವಾರ ಕಾವೇರಿದ ಚರ್ಚೆ ನಡೆಯಿತು. ಬೀದಿ ನಾಯಿ ಕಾಟ ಸಮಸ್ಯೆ ತಡೆಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷಗಳ ಶಾಸಕರು ಸರ್ಕಾರವನ್ನು ಒತ್ತಾಯಿಸಿದರು. ಉಮಾನಾಥ್ ಕೋಟ್ಯನ್, ಸುರೇಶ್ ಕುಮಾರ್ ಹಾಗೂ ಇತರ ಸದಸ್ಯರು ಮಾತನಾಡಿ, ಬೆಂಗಳೂರಿನಲ್ಲಿ ಕಳೆದ ಆರು ತಿಂಗಳಲ್ಲಿ 18,000ಕ್ಕೂ ಅಧಿಕ ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬಿಸ್ ಪ್ರಕರಣಗಳು ವರದಿಯಾಗಿರುವುದನ್ನು ಉಲ್ಲೇಖಿಸಿದರು. ಇದು ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಅವರು ಎಚ್ಚರಿಸಿದರು.
ಬೀದಿ ನಾಯಿಗಳ ಸಮಸ್ಯೆಯನ್ನು ನಿಭಾಯಿಸಲು ಸುಪ್ರೀಂ ಕೋರ್ಟ್ ಈಗಾಗಲೇ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳನ್ನು ಕರ್ನಾಟಕದಲ್ಲೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ವಿಪಕ್ಷಗಳು ಆಗ್ರಹಿಸಿವೆ. ಬೀದಿ ನಾಯಿಗಳನ್ನು ಹಿಡಿಯಲು ಮತ್ತು ಅವುಗಳಿಗೆ ಸೂಕ್ತ ವ್ಯವಸ್ಥೆ ಮಾಡಲು ಎಲ್ಲಾ ಪುರಸಭೆಗಳಿಗೆ ಸೂಚನೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಮಕ್ಕಳು ಮತ್ತು ಇತರ ಸಾರ್ವಜನಿಕರ ಮೇಲೆ ನಾಯಿ ಕಡಿತದ ಪರಿಣಾಮಗಳನ್ನು ತಡೆಯುವುದು ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ.
ಶಾಸಕರ ಭವನದ ಸುತ್ತಮುತ್ತಲೂ ಬೀದಿ ನಾಯಿಗಳ ಸಮಸ್ಯೆ ಇದ್ದು, ಅದರ ಬಗ್ಗೆಯೂ ಗಮನ ಸೆಳೆಯಲಾಗಿದೆ. ಶಾಸಕರ ಭವನದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮತ್ತು ನಾಯಿಗಳನ್ನು ದೂರವಿಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.