ರಾಜ್ಯ ಕಾಂಗ್ರೆಸ್ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದ್ದು, ಹಲವು ಸಚಿವ ಸ್ಥಾನಗಳು ಖಾಲಿ ಇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ವಾಪಸಾದ ನಂತರ ಹೈಕಮಾಂಡ್ ಸಚಿವ ಸ್ಥಾನ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದು, ಜಾತಿ, ಪ್ರದೇಶ ಮತ್ತು ಪಕ್ಷ ನಿಷ್ಠೆಯನ್ನು ಸಮತೋಲನಗೊಳಿಸುವುದು ಸವಾಲಾಗಿದೆ.
ಬೆಂಗಳೂರು, ಜುಲೈ 13: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿ 40 ದಿನಗಳೇ ಕಳೆಯುತ್ತ ಬಂತು. ಆದರೆ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಮಾತ್ರ ಇನ್ನೂ ಬಿಟ್ಟಿಲ್ಲ. ಯಾವಾಗ ಗ್ರಹಣ ಬಿಡಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಸಿಕ್ತಿಲ್ಲ. 15ಕ್ಕೂ ಹೆಚ್ಚು ಸಚಿವ ಸ್ಥಾನಗಳು ಖಾಲಿ ಇವೆ. ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣಾ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ. ಇದರ ಭಾಗವಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕಳೆದ ಹಲವು ದಿನಗಳ ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ದೆಹಲಿಗೆ ಮರಳಿದ್ದು, ಇದು ಸಂಪುಟ ವಿಸ್ತರಣೆಯ ಚರ್ಚೆಗೆ ವೇಗ ನೀಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್, ರಾಹುಲ್ ಗಾಂಧಿ ಜೊತೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಸಂಪುಟ ವಿಸ್ತರಣೆಯ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಬೇಕಿದ್ದು, ಯಾರಿಗೆ ಸ್ಥಾನ ಕೊಡಬೇಕು, ಯಾರನ್ನು ಕೈಬಿಡಬೇಕು, ಯಾವ ಪ್ರದೇಶಕ್ಕೆ ಎಷ್ಟು ಪ್ರಾತಿನಿಧ್ಯ ಮತ್ತು ಯಾವ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂಬುವುದು ದೊಡ್ಡ ಸವಾಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಲಿದೆ ಎಂದು ಹೇಳಿಕೆ ನೀಡಿದ್ದು, ಆಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಲಾಬಿ ನಡೆಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
