ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಶುರುವಾಯ್ತು ಟೆನ್ಷನ್

Updated on: May 27, 2026 | 1:37 PM

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ರಾಜೀನಾಮೆ ನಿರ್ಧಾರದಿಂದ ಆಪ್ತ ಸಚಿವರು ಆತಂಕಗೊಂಡಿದ್ದಾರೆ. ಬಾಕಿ ಉಳಿದಿರುವ ಇಲಾಖಾ ಕೆಲಸಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ. ಆದರೆ, ಹೈಕಮಾಂಡ್ ಸೂಚನೆಯಂತೆ ತಕ್ಷಣವೇ ರಾಜೀನಾಮೆ ನೀಡಲು ಸಿದ್ದರಾಮಯ್ಯ ದೃಢ ನಿರ್ಧಾರ ಕೈಗೊಂಡಿದ್ದಾರೆ. ಅವರ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಬೆಂಗಳೂರು, ಮೇ.27: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ರಾಜೀನಾಮೆ ನಿರ್ಧಾರದಿಂದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ. ದೆಹಲಿಯಿಂದ ಮರಳಿದ ನಂತರ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಇದು ಕೆಲವು ಆಪ್ತ ಸಚಿವರು ಮತ್ತು ಶಾಸಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಲಾಖೆಗಳಲ್ಲಿ ಬಾಕಿ ಉಳಿದಿರುವ ಹಲವಾರು ಅನುದಾನದ ಆದೇಶಗಳು ಮತ್ತು ಯೋಜನೆಗಳಿಗೆ ಸಿಎಂ ಸಮ್ಮತಿ ಅಗತ್ಯವಿದೆ. ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಿದರೆ ಈ ಕೆಲಸಗಳು ನಿಂತುಹೋಗುವ ಭೀತಿ ಸಚಿವರನ್ನು ಕಾಡುತ್ತಿದೆ. ಆದ್ದರಿಂದ, ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕನಿಷ್ಠ ರಾಜ್ಯಸಭೆ ಚುನಾವಣೆ ಮುಗಿಯುವ ಜೂನ್ 18ರವರೆಗೆ ರಾಜೀನಾಮೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಆದರೆ, ಹೈಕಮಾಂಡ್ ನಾಯಕರ ಸೂಚನೆಯನ್ನು ಒಪ್ಪಿಕೊಂಡಿರುವ ಸಿದ್ದರಾಮಯ್ಯ, ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೆ ನಾಳೆಯೇ ರಾಜೀನಾಮೆ ನೀಡುವ ತಮ್ಮ ದೃಢ ನಿಲುವನ್ನು ಅವರು ಸಚಿವರುಗಳಿಗೆ ಸ್ಪಷ್ಟಪಡಿಸಿದ್ದಾರೆ. ಹೊಸ ಫೈಲ್‌ಗಳನ್ನು ಚಲಿಸದಂತೆ ಸೂಚಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಕುರಿತು ಮತ್ತಷ್ಟು ಚರ್ಚೆ ನಡೆಯುವ ನಿರೀಕ್ಷೆ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 27, 2026 01:37 PM
Follow Us