ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ

Updated on: Feb 07, 2025 | 11:39 AM

ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲದ ಕಾರಣ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಮೈಸೂರು, ಫೆಬ್ರವರಿ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ನಕಾರ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಲಯದ ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹೋಗುತ್ತೇನೆ. ಹೈಕೋರ್ಟ್ ಆದೇಶದ ಪ್ರತಿ ಸಿಕ್ಕಿ ಮೇಲೆ ಪರಿಶೀಲಿಸಿದ ಬಳಿಕ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಪ್ರಕರಣದ ತನಿಖೆ ಸಿಬಿಐಗೆ ನೀಡುವಂತೆ ಹೋರಾಟ ಮುಂದುವರಿಯುತ್ತೆ ಎಂದರು.

ನ್ಯಾಯಾಲಯ ಯಾವ ವಿಚಾರವನ್ನು ಇಟ್ಟುಕೊಂಡು ವಜಾ ಮಾಡಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಮುಂದಿನ ವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಸಿಬಿಐಗೆ ನೀಡುವಂತೆ ನಾವು ಹೋರಾಟ ಮಾಡುತ್ತೇವೆ. ಸರ್ವೋಚ್ಚ ನ್ಯಾಯಾಲಯ ಸಿಬಿಐಗೆ ನೀಡುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ವಿ ಈಗ ಸಣ್ಣ ಹಿನ್ನಡೆಯಾಗಿದೆ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು.

Follow Us