ರಾಜ್ಯದಲ್ಲಿ ರಕ್ತದ ಕೊರತೆಗೆ ಬ್ರೇಕ್: 20 ಕೋಟಿ ರೂ. ವೆಚ್ಚದಲ್ಲಿ 4 ಪ್ರಾದೇಶಿಕ ರಕ್ತ ನಿಧಿ ಕೇಂದ್ರ ಸ್ಥಾಪನೆ

Updated on: Aug 01, 2026 | 9:47 PM

ಆರೋಗ್ಯ ಸಚಿವ ಯು. ಟಿ. ಖಾದರ್ ಅವರು ರಕ್ತದಾನಕ್ಕೆ ಪ್ರೋತ್ಸಾಹ ನೀಡಲು, ಪ್ರಾದೇಶಿಕ ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ರಕ್ತದ ಕೊರತೆಯನ್ನು ನೀಗಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ರಕ್ತ ದೊರೆಯಲಿದ್ದು, ಎಪಿಎಲ್ ಕಾರ್ಡುದಾರರಿಗೂ ಉಚಿತ ರಕ್ತ ನೀಡುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ರಕ್ತದ ಬೆಲೆ ನಿಗದಿಪಡಿಸಲಾಗಿದ್ದು, ಹೆಚ್ಚು ಶುಲ್ಕ ವಿಧಿಸಿದರೆ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು, ಆ.1: ಕರ್ನಾಟಕದಲ್ಲಿ ರಕ್ತದ ಕೊರತೆ ನೀಗಿಸಲು ಮತ್ತು ರಕ್ತದಾನವನ್ನು ಪ್ರೋತ್ಸಾಹಿಸಲು ಆರೋಗ್ಯ ಸಚಿವ ಯು. ಟಿ. ಖಾದರ್ ಅವರು ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಯುವಜನರು ಮತ್ತು ಸಂಘ ಸಂಸ್ಥೆಗಳನ್ನು ಉತ್ತೇಜಿಸಲಾಗುವುದು. ರಕ್ತದ ಕೊರತೆಯಿಂದಾಗಿ ಯಾವುದೇ ವ್ಯಕ್ತಿ ಅಥವಾ ಕುಟುಂಬ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ಪ್ರಮುಖ ಕಾಳಜಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿರುವ ರಕ್ತ ಬ್ಯಾಂಕ್‌ಗಳನ್ನು ಬಲಪಡಿಸಲಾಗುವುದು. ಇದರ ಜೊತೆಗೆ, ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಬಳ್ಳಾರಿಯ ಭೀಮ್ಸ್ ಮತ್ತು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಾಲ್ಕು ಪ್ರಾದೇಶಿಕ ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಕೇಂದ್ರಗಳು ಸುತ್ತಮುತ್ತಲಿನ ಜಿಲ್ಲೆಗಳ ರಕ್ತದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡಲಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ರಕ್ತ ನೀಡಲಾಗುತ್ತಿದೆ. ಇದೀಗ ಎಪಿಎಲ್ ಕಾರ್ಡುದಾರರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ನೀಡುವ ಕುರಿತು ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಪೂರ್ತಿ ರಕ್ತಕ್ಕೆ 1550 ರೂಪಾಯಿ, ಪ್ಲೇಟ್ಲೆಟ್ ಮತ್ತು ಪ್ಲಾಸ್ಮಾಕ್ಕೆ 400 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಡಿಎಚ್‌ಒ ಕಚೇರಿಗೆ ದೂರು ನೀಡಲು ಸಚಿವರು ಕರೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us