ಇನ್ನೆರಡೇ ದಿನ ವರುಣನ ಅಬ್ಬರ, ಮತ್ತೆ ಮಳೆ ಬರಲ್ಲ: ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

Updated on: Jul 09, 2026 | 10:52 AM

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶೀಘ್ರವೇ ಬ್ರೇಕ್ ಬೀಳಲಿದೆ. ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಪ್ರಕಾರ, ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು, ನಂತರ ಕ್ಷೀಣಿಸಲಿದೆ. 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 11ರಿಂದ ಬಹುತೇಕ ಕಡೆ ಒಣಹವೆ ನಿರೀಕ್ಷಿಸಲಾಗಿದೆ.

ಬೆಂಗಳೂರು, ಜು.9: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಸುರಿಯುತ್ತಿರುವ ಮಳೆಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ ಎಂಬ ಮುನ್ಸೂಚನೆಯನ್ನು ನೀಡಿವೆ. ಇನ್ನೆರಡು ದಿನಗಳ ಕಾಲ ಮಾತ್ರ ರಾಜ್ಯಾದ್ಯಂತ ಅಬ್ಬರದ ಮಳೆಯಾಗಲಿದ್ದು, ಆ ಬಳಿಕ ಮಳೆರಾಯ ಮಂಕಾಗಲಿದ್ದಾನೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ತಿಳಿಸಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ಮಲೆನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಮಳೆಯೊಂದಿಗೆ ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜುಲೈ 10ರಂದು ಕರಾವಳಿ ಹಾಗೂ ಘಟ್ಟ ಪ್ರದೇಶಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಆದರೆ, ಜುಲೈ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕ್ಷೀಣಿಸಲಿದ್ದು, ಒಣಹವೆ ಮೂಡುವ ಸಾಧ್ಯತೆ ಹೆಚ್ಚಿದೆ ಎಂದು ಡಾ. ಲತಾ ಸ್ಪಷ್ಟಪಡಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆ ಇರುವುದಿಲ್ಲ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Follow Us