ಕರ್ನಾಟಕ SIR ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ

Updated on: Jul 04, 2026 | 11:30 AM

ಕರ್ನಾಟಕದಲ್ಲಿ SIR ಪ್ರಕ್ರಿಯೆಯಲ್ಲಿನ ಲೋಪಗಳು ರಾಜಕೀಯ ಬಿರುಗಾಳಿ ಎಬ್ಬಿಸಿವೆ. ಮನೆ ಮನೆಗೆ ತೆರಳಿ ಮತದಾರರ ಪರಿಷ್ಕರಣೆ ನಡೆಸುವ ಬದಲು ಸಾಮೂಹಿಕವಾಗಿ ಜನರನ್ನು ಸೇರಿಸಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಸರ್ಕಾರವನ್ನು ಟೀಕಿಸಿವೆ. ಈ ವಿಷಯವನ್ನು ಪ್ರಮುಖ ಅಸ್ತ್ರವಾಗಿ ಪರಿಗಣಿಸಿ, ಎರಡೂ ಪಕ್ಷಗಳು ಜಂಟಿ ಹೋರಾಟಕ್ಕೆ ಸಜ್ಜಾಗಿವೆ.

ಬೆಂಗಳೂರು, ಜುಲೈ 4: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಕರ್ತವ್ಯ ಲೋಪಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಕಿಚ್ಚು ಹಚ್ಚಿವೆ. ಎಸ್​ಐಆರ್​​ಗಾಗಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಬದಲು, ಮಸೀದಿಗಳು, ದೇವಸ್ಥಾನಗಳು, ಸಮುದಾಯ ಭವನಗಳು ಮತ್ತು ಚೌಲ್ಟ್ರಿಗಳಲ್ಲಿ ಸಾಮೂಹಿಕವಾಗಿ ಜನರನ್ನು ಸೇರಿಸಿ ಎಸ್ಐಆರ್ ನಡೆಸಲಾಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿವೆ. ಈ ಅಕ್ರಮಗಳನ್ನು ಸರ್ಕಾರದ ವಿರುದ್ಧದ ಪ್ರಮುಖ ಅಸ್ತ್ರವನ್ನಾಗಿ ಪರಿಗಣಿಸಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿ ಸಮರಕ್ಕೆ ಸಿದ್ಧತೆ ನಡೆಸಿವೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಈ ವಿಚಾರದಲ್ಲಿ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಜಂಟಿ ಹೋರಾಟದ ರೂಪರೇಷೆಗಳ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಲಿದ್ದಾರೆ. ಈ ಹೋರಾಟದ ಮೂಲಕ ರಾಜ್ಯಾದ್ಯಂತ ಸಂಚಲನ ಮೂಡಿಸಿ, ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಿವೆ ಎಂಬ ಸಂದೇಶವನ್ನು ಜನರಿಗೆ ತಲುಪಿಸುವುದು ವಿಪಕ್ಷಗಳ ಮುಖ್ಯ ಉದ್ದೇಶವಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮತದಾರರನ್ನು ಗುಂಪು ಸೇರಿಸಿ ಎಸ್ಐಆರ್ ನಡೆಸಿದ ಆರೋಪದ ಮೇಲೆ ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಸೇರಿದಂತೆ ಐವರು ಬಿಎಲ್‌ಓಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿ ರವಿ ಅವರು ಚುನಾವಣಾ ಆಯೋಗದ ನಿಯಮಾನುಸಾರ ಎಸ್ಐಆರ್ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us