ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಮುಖ್ಯಾಂಶಗಳು
- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ
- ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದರ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿದೆ
- ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರು
ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿದೆ. ಶಿವೋಲಿ ಗ್ರಾಮದ ರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಟ್ರ್ಯಾಕ್ಟರ್ನ ಮುಂಭಾಗ ಭಾರಿ ಹಾನಿಗೊಳಗಾಗಿದ್ದು, ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ನೆರವಾಗಿದ್ದಾರೆ. ಮಳೆಗಾಲದಲ್ಲಿ ಸುರಕ್ಷತೆಯ ಬಗ್ಗೆ ಈ ಘಟನೆ ಎಚ್ಚರಿಕೆ ನೀಡಿದೆ.
ಖಾನಾಪುರ, ಜು.6: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದರ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿರುವ ಆಘಾತಕಾರಿ ಘಟನೆ ನಡೆದಿದೆ. ಆದರೆ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಖಾನಾಪುರ ತಾಲೂಕಿನ ಶಿವೋಲಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ಪುಂಡಲೀಕ್ ಪಾಟೀಲ್ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದ್ದು, ಎಂದಿನಂತೆ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ಆಗಿ ರಸ್ತೆ ಬದಿಯ ದೈತ್ಯ ಮರವೊಂದು ಮುರಿದು ನೇರವಾಗಿ ಟ್ರ್ಯಾಕ್ಟರ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಟ್ರ್ಯಾಕ್ಟರ್ನ ಮುಂಭಾಗದ ಎಂಜಿನ್ ಸಂಪೂರ್ಣವಾಗಿ ಜಜ್ಜುಗುಜ್ಜಾಗಿದ್ದು, ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಇಂಜಿನ್ ಮೇಲೆಯೇ ಮರ ಬಿದ್ದಿದ್ದರೂ ಚಾಲಕನ ಸಮಯಪ್ರಜ್ಞೆಯಿಂದಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣವೇ ಸ್ಥಳೀಯ ನಿವಾಸಿಗಳು ರಕ್ಷಣೆಗೆ ಧಾವಿಸಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕತ್ತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
