ಯಲಬುರ್ಗಾ: ರೈತರ ಮೇಲೆ ಪಿಎಸ್ಐ ಗುರುರಾಜ್ ದೌರ್ಜನ್ಯ ಆರೋಪ, ವಿಡಿಯೋ ವೈರಲ್
Koppal news: ಕೊಪ್ಪಳ ಜಿಲ್ಲೆಯ ಕುದುರಿಮೋತಿ ಗ್ರಾಮದಲ್ಲಿ ಬೇವೂರು ಠಾಣೆ ಪಿಎಸ್ಐ ಗುರುರಾಜ್ ರೈತರೊಂದಿಗೆ ವಾಗ್ವಾದ ನಡೆಸಿದ್ದಲ್ಲದೆ, ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವಿಡಿಯೋ ವೈರಲ್ ಆಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕೊಪ್ಪಳ, ಜುಲೈ 20: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದುರಿಮೋತಿ ಗ್ರಾಮದಲ್ಲಿ ವಿದ್ಯುತ್ ಸ್ಥಾವರ ಅಳವಡಿಕೆ ವಿಚಾರವಾಗಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಬೇವೂರು ಪೊಲೀಸ್ ಠಾಣೆಯ ಪಿಎಸ್ಐ ಗುರುರಾಜ್ ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರೈತರನ್ನು ಏಕವಚನದಲ್ಲಿ ನಿಂದಿಸಿ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಿಎಸ್ಐ ಗುರುರಾಜ್ ಈ ಹಿಂದೆ ಕುಕನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಅಮಾನತುಗೊಂಡಿದ್ದರು. ಬಳಿಕ ಇತ್ತೀಚೆಗೆ ಬೇವೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು. ಇದೀಗ ಮತ್ತೆ ರೈತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
