KSRTC, BMTC Strike: ಬುಧವಾರದಿಂದ ಸಿಗಲ್ಲ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್! ಸಾರಿಗೆ ಮುಷ್ಕರ ಬಹುತೇಕ ಫಿಕ್ಸ್
Karnataka Transport strike: ಬುಧವಾರದಿಂದ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸೇವೆ ಲಭ್ಯವಿರುವುದಿಲ್ಲ. ಜಂಟಿ ಕ್ರಿಯಾ ಸಮಿತಿ 25% ವೇತನ ಪರಿಷ್ಕರಣೆ ಮತ್ತು 38 ತಿಂಗಳ ವೇತನ ಹಿಂಬಾಕಿಗಾಗಿ ಮುಷ್ಕರಕ್ಕೆ ಕರೆ ನೀಡಿದೆ. ಸರ್ಕಾರ 12.5% ವೇತನ ಪರಿಷ್ಕರಣೆ ಮತ್ತು 26 ತಿಂಗಳ ಹಿಂಬಾಕಿ ಬಿಡುಗಡೆಗೆ ಮುಂದಾಗಿದೆ. ಇಂದು ನಡೆಯುವ ಸಭೆಯಲ್ಲಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
ಬೆಂಗಳೂರು, ಮೇ 18: ಬುಧವಾರದಿಂದ BMTC ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವೇತನ ಪರಿಷ್ಕರಣೆ ಮತ್ತು ಬಾಕಿ ಹಣಕ್ಕಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿರುವುದೇ ಇದಕ್ಕೆ ಕಾರಣ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಒಪ್ಪಿದೆ. ಅಲ್ಲದೆ, 26 ತಿಂಗಳ ವೇತನ ಹಿಂಬಾಕಿಯ ಮೊದಲ ಕಂತಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ನೌಕರರು ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳು ಈಡೇರದ ಹೊರತು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಷ್ಕರ ತಪ್ಪಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥಪಡಿಸಲು ಪ್ರಯತ್ನಿಸಲಿದ್ದಾರೆ. ಸಭೆಯ ಫಲಿತಾಂಶದ ಮೇಲೆ ಬುಧವಾರದ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
