AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿ ಬಿದ್ದ ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮಿಕ

ಗುಂಡಿ ಬಿದ್ದ ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮಿಕ

TV9 Web
| Edited By: |

Updated on: Jul 24, 2026 | 11:10 AM

Share

ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿನ ಹದಗೆಟ್ಟ ಗುಂಡಿಗಳನ್ನು ಕೂಲಿ ಕಾರ್ಮಿಕ ಶಫಿಉಲ್ಲಾ ತಮ್ಮ ಸ್ವಂತ ಹಣದಿಂದ ಮುಚ್ಚಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಎಂಎಲ್ಎಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಅಪಘಾತಗಳು ಸಂಭವಿಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈ ರಸ್ತೆಯ ದಯನೀಯ ಸ್ಥಿತಿ ಜನಪ್ರತಿನಿಧಿಗಳ ಕಾರ್ಯವೈಖರಿಗೆ ಕನ್ನಡಿ ಹಿಡಿದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚಾಮರಾಜನಗರ, ಜು.24: ಜಿಲ್ಲಾ ಕೇಂದ್ರದಿಂದ ಗುಂಡ್ಲುಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯುಂಟುಮಾಡುತ್ತಿದೆ. ಹಲವು ವರ್ಷಗಳಿಂದ ಗುಂಡಿಗಳಿಂದ ತುಂಬಿಹೋಗಿರುವ ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಸಾರ್ವಜನಿಕರು ಹಾಗೂ ಕೂಲಿ ಕಾರ್ಮಿಕ ಶಫಿಉಲ್ಲಾ ಅವರು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತ ಶಫಿಉಲ್ಲಾ, ತಮ್ಮ ಕಾಯಕದ ಮೂಲಕ ಗಳಿಸಿದ ಹಣವನ್ನೇ ವೆಚ್ಚ ಮಾಡಿ, ರಸ್ತೆಯ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ. ಬೈಪಾಸ್ ರಸ್ತೆಯಲ್ಲಿ ಇತ್ತೀಚೆಗೆ ಮೂರು ಅಪಘಾತಗಳು ಸಂಭವಿಸಿದ್ದು, ಮಳೆ ಬಂದಾಗ ನೀರು ನಿಂತು ಕೆರೆಯಂತಾಗುತ್ತದೆ, ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಶಫಿಉಲ್ಲಾ ಹೇಳಿದ್ದಾರೆ. ಶಾಲಾ ಮಕ್ಕಳು, ಆಸ್ಪತ್ರೆಗೆ ಹೋಗುವವರು, ಆ್ಯಂಬುಲೆನ್ಸ್‌ಗಳಿಗೆ ಗುಂಡಿಗಳಿಂದ ತೊಂದರೆಯಾಗುತ್ತಿದೆ. ನಾಲ್ಕು ಬಾರಿ ಗೆದ್ದಿರುವ ಸ್ಥಳೀಯ ಎಂಎಲ್ಎ ಸೇರಿದಂತೆ ಅಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸಿದರೂ, ಅದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ರವಿ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನಗರ ಪ್ರದೇಶದ ರಸ್ತೆಗಳೇ ಹೀಗಾದರೆ, ಹಳ್ಳಿಗಳ ರಸ್ತೆಗಳ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲ. ಶಫಿಉಲ್ಲಾ ಅವರ ಈ ಕಾರ್ಯವು ಅಧಿಕಾರಿಗಳು ಮತ್ತು ರಾಜಕೀಯ ನಾಯಕರಿಗೆ ನಾಚಿಕೆಗೇಡಿನ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಗಮನ ಹರಿಸದಿದ್ದರೆ ಭವಿಷ್ಯದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us