ಮಾದಪ್ಪನ ಭಕ್ತರಿಗೂ ಚಿರತೆ ಕಾಟ: ರಸ್ತೆಯ ಬದಿಯೇ‌ ಸೇತುವೆ ಮೇಲೆ ಕುಳಿತ ಚಿರತೆ! ಪಾದಯಾತ್ರೆ ಬರುವ ಭಕ್ತರೇ ಎಚ್ಚರ

Edited By:

Updated on: Jan 16, 2026 | 7:56 AM

ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ತಾಳಬೆಟ್ಟ ಪ್ರದೇಶದಲ್ಲಿ ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದ, ಕಾಲ್ನಡಿಗೆಯಲ್ಲಿ ತೆರಳುವ ಭಕ್ತರಿಗೆ ಆತಂಕ ಶುರುವಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಪಾದಯಾತ್ರೆ ಮಾರ್ಗದಲ್ಲಿ ನಿಗಾ ಹೆಚ್ಚಿಸುವುದು, ರಾತ್ರಿ ಸಂಚಾರಕ್ಕೆ ನಿಯಂತ್ರಣ ಹಾಗೂ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸುವುದು ಅತ್ಯಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಸ್ತೆ ಬದಿ ಚಿರತೆ ಕುಳಿತ ವಿಡಿಯೋ ಇಲ್ಲಿದೆ.

ಚಾಮರಾಜನಗರ, ಜನವರಿ 16: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವ ಮಾದಪ್ಪನ ಭಕ್ತರಲ್ಲಿ ಚಿರತೆ ಭೀತಿ ಹೆಚ್ಚಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತಿದೆ ಎನ್ನಲಾಗಿದೆ. ಚಿರತೆ ರಸ್ತೆ ಬದಿ ಇರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿರುವುದರಿಂದಾಗಿ ಇದೀಗ ಪಾದಯಾತ್ರೆ ಮೂಲಕ ಸಾಗುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಎಚ್ಚರ ವಹಿಸಲೇಬೇಕಾದ ಸನ್ನಿವೇಶ ಎದುರಾಗಿದೆ.

ತಾಳಬೆಟ್ಟ ಮಾರ್ಗವು ಭಕ್ತರ ಪಾದಯಾತ್ರೆಗೆ ಪ್ರಮುಖ ದಾರಿಯಾಗಿದ್ದು, ಚಿರತೆ ಕಾಣಿಸಿಕೊಂಡ ಬಳಿಕ ಭಕ್ತರು ಭಯದಲ್ಲಿ ಸಾಗುವಂತಾಗಿದೆ. ವಿಶೇಷವಾಗಿ ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಅಪಾಯ ಹೆಚ್ಚಿರುವುದರಿಂದ, ಮಕ್ಕಳು, ವೃದ್ಧರು ಹಾಗೂ ಮಹಿಳಾ ಭಕ್ತರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು, ಭಕ್ತರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ಅಲ್ಲದೆ, ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 16, 2026 07:48 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More