ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ನಿವಾಸ, ಏಳು ಮನೆಗಳು, ಕೊಡಗಿನಲ್ಲಿ ಎರಡು ಕಾಫಿ ಎಸ್ಟೇಟ್ ಹಾಗೂ ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ.
ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ಹತ್ತು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ. ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್ಗಳು ಮತ್ತು ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ದಾಳಿಯನ್ನು ನಡೆಸಿದ್ದಾರೆ. ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ಮುಂದುವರೆದಿದೆ.
ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

