ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ: ತಲೆ ಮೇಲೆ ಕಲ್ಲು ಹೊತ್ತು ರೈತರ ತೀವ್ರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ CWMA ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯಲು ನೀರಿಲ್ಲದಿದ್ದರೂ ಕೃಷಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ, ರಾಜ್ಯ ಸರ್ಕಾರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಲು ಸಿದ್ಧತೆ ನಡೆಸಿದೆ.
ಮಂಡ್ಯ, ಸೆ.9: ಕಾವೇರಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತುಕೊಂಡು, ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಧರಣಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ರೈತರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿಗೂ ಹಾಗೂ ಬೆಳೆಗಳಿಗೂ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ, ತಮಿಳುನಾಡಿಗೆ ಕೃಷಿಗಾಗಿ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದ್ದು, ನೀರು ಬಿಟ್ಟರೆ ರೈತರಿಗೆ ವಿಷ ಕೊಟ್ಟುಬಿಡಿ ಎಂದು ಆಕ್ರೋಶದಿಂದ ನುಡಿದಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಲೇವಡಿ ಮಾಡಿದ್ದಾರೆ. ಈ ಪರಿಸ್ಥಿತಿಯನ್ನು ನ್ಯಾಯಸಮ್ಮತವಲ್ಲ ಎಂದು ರಾಜ್ಯ ಸರ್ಕಾರ ಪರಿಗಣಿಸಿದೆ. ಮುಖ್ಯಮಂತ್ರಿಗಳು ಕಾನೂನು ತಂಡ ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲು ಸೂಚಿಸಿದ್ದಾರೆ. ನ್ಯಾಯಾಲಯದಲ್ಲಿ ಈ ಆದೇಶವನ್ನು ಪ್ರಶ್ನಿಸಲು ಸಿದ್ಧತೆಗಳು ನಡೆಯುತ್ತಿವೆ. ತಾಂತ್ರಿಕ ಮತ್ತು ಕಾನೂನು ತಂಡಗಳು ಚರ್ಚೆಯಲ್ಲಿ ತೊಡಗಿದ್ದು, ಶೀಘ್ರದಲ್ಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
