ಮಂಡ್ಯದ ವಸತಿಶಾಲೆಯಲ್ಲಿ ಫುಡ್ ಪಾಯಿಸನ್: 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮಂಡ್ಯದ ಕೆ.ಆರ್.ಪೇಟೆ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಆಹಾರ ವಿಷಯುಕ್ತಗೊಂಡು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಊಟ ಸೇವಿಸಿದ ನಂತರ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಎಲ್ಲರೂ ಚೇತರಿಸಿಕೊಂಡು ವಸತಿಶಾಲೆಗೆ ಮರಳಿದ್ದಾರೆ. ಶಾಸಕ ಹೆಚ್.ಟಿ. ಮಂಜು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಡ್ಯ, ಸೆ.10: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಆಹಾರ ವಿಷಯುಕ್ತಗೊಂಡು (Food Poisoning) 25ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ವಸತಿಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾಗಿತ್ತು. ನಿನ್ನೆ ರಾತ್ರಿ ವಾಂತಿಯಿಂದ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಅಗತ್ಯ ತುರ್ತು ಚಿಕಿತ್ಸೆ ನೀಡಲಾಯಿತು. ವೈದ್ಯರ ಸತತ ಆರೈಕೆಯ ನಂತರ ಮಕ್ಕಳ ಆರೋಗ್ಯ ಸ್ಥಿರಗೊಂಡಿದ್ದು, ಚಿಕಿತ್ಸೆ ಪಡೆದ ಬಳಿಕ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ವಸತಿಶಾಲೆಗೆ ಮರಳಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಹೆಚ್.ಟಿ. ಮಂಜು ಅವರು ಆಸ್ಪತ್ರೆ ಹಾಗೂ ವಸತಿಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಪೂರೈಸುವಂತೆ ಸೂಚಿಸಿದ ಶಾಸಕರು, ಆಹಾರ ವಿಷಯುಕ್ತವಾಗಲು ಕಾರಣವೇನು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ತಕ್ಷಣವೇ ವರದಿ ಸಲ್ಲಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಸತಿಶಾಲೆಯ ಆಡಳಿತ ಮಂಡಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ