ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ

Edited By:

Updated on: Apr 24, 2026 | 1:59 PM

ಕೊಪ್ಪಳದ ಕೂಕನಪಳ್ಳಿ ಹೊರವಲಯದಲ್ಲಿ ಅನ್ನಭಾಗ್ಯ ಯೋಜನೆಯ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 150 ಟನ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಕೊಪ್ಪಳ, ಏಪ್ರಿಲ್​​ 24: ತಾಲೂಕಿನ ಕೂಕನಪಳ್ಳಿ ಹೊರವಲಯದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ದಾಸ್ತಾನನ್ನು ಪತ್ತೆ ಹಚ್ಚಲಾಗಿದೆ. ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಟನ್‌ನಷ್ಟು ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂಬುದು ಗೊತ್ತಾಗಿದೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ನಡೆಯುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ಕಿಯನ್ನು ಹೊರ ರಾಜ್ಯಗಳಿಗೆ ರಫ್ತು ಮಾಡುವ ಉದ್ದೇಶ ಹೊಂದಿದ್ದರು ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us