ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ನಿರ್ಣಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಖಡಕ್ ತಿರುಗೇಟು ನೀಡಿದ್ದಾರೆ. ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ, ಕರ್ನಾಟಕ ಖಂಡಿತಾ ಅನುಷ್ಠಾನಗೊಳಿಸಲಿದೆ. ನೆರೆ ರಾಜ್ಯಗಳು ಆಕ್ಷೇಪಿಸಬಾರದೆಂದು ಕೇಂದ್ರವೇ ಸ್ಪಷ್ಟಪಡಿಸಿದೆ. ಆಗಸ್ಟ್ 15ರೊಳಗೆ ಡಿಪಿಆರ್ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್ ಕೂಡ ತಮಿಳುನಾಡು ಅರ್ಜಿಗಳನ್ನು ವಜಾಗೊಳಿಸಿದೆ. ಕರ್ನಾಟಕ ತನ್ನ ಸಂಕಲ್ಪಕ್ಕೆ ಬದ್ಧವಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.
ಬೆಂಗಳೂರು ಆ. 5: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಮಿಳುನಾಡಿಗೆ ಖಡಕ್ ತಿರುಗೇಟು ನೀಡಿದ್ದಾರೆ. ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ ಹಾಗೂ ರಾಜ್ಯ ಸರ್ಕಾರವು ಖಂಡಿತವಾಗಿಯೂ ಈ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳು ಆಕ್ಷೇಪ ಎತ್ತುವಂತಿಲ್ಲ ಎಂದು ಸ್ವತಃ ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ (DPR) ಸಲ್ಲಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಆಗಸ್ಟ್ 15ರೊಳಗೆ ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು. ಯೋಜನೆಗೆ ತಡೆ ಒಡ್ಡಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ. ಅವರು ತಮ್ಮ ವಿಧಾನಸಭೆಯಲ್ಲಿ ನಿರ್ಣಯ ಮಾಡಿಕೊಳ್ಳಲಿ, ಅದಕ್ಕೆ ಬೆಲೆ ಇಲ್ಲ. ಈ ಹಿಂದೆ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಎರಡು ಬಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿದೆ. “ನಾವು ಮೇಕೆದಾಟು ಯೋಜನೆಯನ್ನು ಮಾಡಿಯೇ ಸೀರುತ್ತೇವೆ. ಮುಂಬರುವ ಸದನದಲ್ಲೂ ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಿದ್ದೇವೆ” ಎಂದು ಸಚಿವರು ಪುನರುಚ್ಚರಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
