ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ: ಮತ್ತೊಂದು ಪ್ಲ್ಯಾನ್ ರೆಡಿ!
ಸಚಿವ ಕೃಷ್ಣ ಬೈರೇಗೌಡರು ಬೆಂಗಳೂರಿನ ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೂರು ತಿಂಗಳಲ್ಲಿ ಬೃಹತ್ ಬೆಂಗಳೂರು ಪ್ರಾಧಿಕಾರ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಕಸ ನಿರ್ವಹಣೆ, ರಸ್ತೆಗಳ ಡಾಂಬರೀಕರಣಕ್ಕೆ ಒತ್ತು ನೀಡಿದ್ದು, ಅಧಿಕಾರಿಗಳಿಗೆ ಕೆಲಸ ಮಾಡಿ, ಇಲ್ಲವೇ ನಿರ್ಗಮಿಸಿ ಎಂಬ ಸಂದೇಶ ರವಾನಿಸಿದ್ದಾರೆ. ಇದು ಸಾರ್ವಜನಿಕರಲ್ಲಿ ಹೊಸ ಭರವಸೆ ಮೂಡಿಸಿದೆ.
ಬೆಂಗಳೂರು, ಆಗಸ್ಟ್ 29: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಗ್ರೇಟರ್ ಬೆಂಗಳೂರು ಅಥಾರಿಟಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಆ ನಿಟ್ಟಿನಲ್ಲಿ ನಗರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಕಂದಾಯ ಸಚಿವರಾಗಿ ಪೋಡಿ ಅಭಿಯಾನದ ಮೂಲಕ ಯಶಸ್ಸು ಕಂಡಿದ್ದ ಅವರು, ಇದೀಗ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು, ‘ಕಸದಿಂದ ಸ್ವಾತಂತ್ರ್ಯ’ ಅಭಿಯಾನ ಹಾಗೂ ‘ಬಿ’ ಖಾತೆಯಿಂದ ‘ಎ’ ಖಾತಾ ಬದಲಾವಣೆ ಪ್ರಕ್ರಿಯೆಗೆ ಆದ್ಯತೆ ನೀಡಿದ್ದಾರೆ. ಮುಂದಿನ ಆರು ತಿಂಗಳೊಳಗೆ ಸುಮಾರು 8,000 ಕೋಟಿ ರೂ ವೆಚ್ಚದಲ್ಲಿ 2,500 ಕಿ.ಮೀ ವ್ಯಾಪ್ತಿಯ ರಸ್ತೆಗಳ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಸಾರ್ವಜನಿಕರಿಂದ ಬಂದಿದ್ದ 75,000 ದೂರುಗಳ ಪೈಕಿ ಈಗಾಗಲೇ 73,000 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ಮಳೆಗಾಲದ ಪ್ರವಾಹ ಹಾಗೂ ರಸ್ತೆ ಗುಂಡಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಿರಂತರ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿರುವ ಸಚಿವರು, ಬೆಂಗಳೂರನ್ನು ಸುಂದರ ನಗರವನ್ನಾಗಿಸಲು ಸಾರ್ವಜನಿಕರ ಸಹಕಾರವನ್ನೂ ಕೋರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

