ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಮಾಯವಾಯ್ತು ಮುಂಗಾರು, ಹೇಳತೀರದಾಯ್ತು ಅನ್ನದಾತರ ಸ್ಥಿತಿ

Updated on: Jun 22, 2026 | 9:58 AM

ಮಳೆಗಾಲದಲ್ಲೂ ಮುಂಗಾರು ಮಾಯವಾಗಿದ್ದು ಉತ್ತರ ಕರ್ನಾಟಕದಾದ್ಯಂತ ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಬಿತ್ತನೆ ಮಾಡಿದ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದು, ಅನ್ನದಾತರು ಕಂಗೆಟ್ಟಿದ್ದಾರೆ. ಗದಗ ಜಿಲ್ಲೆಯ ತಗಡೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಒಂದೇ ಬೋರ್‌ವೆಲ್‌ನ ಫ್ಲೋರೈಡ್‌ಯುಕ್ತ ನೀರನ್ನು ಬಳಸುವ ಅನಿವಾರ್ಯತೆ ನಿವಾಸಿಗಳಿಗೆ ಬಂದೊದಗಿದೆ.

ಬೆಂಗಳೂರು, ಜೂನ್ 22: ಕರ್ನಾಟಕದಲ್ಲಿ ಮುಂಗಾರು ಮಳೆಯ ಕೊರತೆಯು ರೈತರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಮಳೆಗಾಲ ಆರಂಭವಾಗಿ 15 ದಿನಗಳೇ ಕಳೆದರೂ ವಾಡಿಕೆಯಂತೆ ಮಳೆಯಾಗದೆ, ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರು ಆಕಾಶ ನೋಡುವಂತಾಗಿದೆ.

ಇದರ ಜೊತೆಗೆ, ಗದಗ ತಾಲೂಕಿನ ತಗಡೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂವತ್ತಕ್ಕೂ ಹೆಚ್ಚು ಮನೆಗಳಿರುವ ಈ ಪುಟ್ಟ ಗ್ರಾಮಕ್ಕೆ ಒಂದೇ ಬೋರ್‌ವೆಲ್ ಆಸರೆಯಾಗಿದೆ. ಆದರೆ, ಈ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿದ್ದು, ಇದನ್ನು ಕುಡಿಯಲು ಮಕ್ಕಳು ಮತ್ತು ವೃದ್ಧರು ಅನಾರೋಗ್ಯಕ್ಕೆ ತುತ್ತಾಗುವ ಆತಂಕವಿದೆ. ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಮನೆ ಮನೆಗೆ ನಲ್ಲಿ ಮೂಲಕ ನೀರು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯೂ ಇಲ್ಲಿ ಜಾರಿಯಾಗಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಈ ಎರಡು ಜಲಸಂಕಷ್ಟಗಳನ್ನು ನಿವಾರಿಸಲು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us