ಕೋರ್ಟ್​ ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜಾದ ದೂರುದಾರ

Updated on: Sep 25, 2024 | 4:49 PM

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್​, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಸೂಚಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಸಿಎಂಗೆ ಸಂಕಷ್ಟ ಶುರುವಾಗಿದ್ದು, ಮುಂದಿನ ನಡೆ ಬಗ್ಗೆ ಹಿರಿಯ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಹೋರಾಟಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 25): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್​ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ. ಹೈಕೋರ್ಟ್​​ ನಿನ್ನೆ ರಾಜ್ಯಪಾಲರ ಆದೇಶ ಎತ್ತಿಹಿಡಿದಿದ್ದರೆ, ಇಂದು ಜನಪ್ರತಿನಿಧಿಗಳ ಕೋರ್ಟ್​, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಆದ್ರೆ, ದೂರುದಾರ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಲೋಕಾಯುಕ್ತ ಬದಲಿಗೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಹೈಕೋರ್ಟ್​ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ.

ಇನ್ನು ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಬೆಂಗಳೂರಿನಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, FIR ದಾಖಲಾದ ನಂತರ ಸಿಬಿಐ ತನಿಖೆ ಕೋರಿ ಹೈಕೋರ್ಟ್​ಗೆ ಅರ್ಜಿ ಹಾಕಲು ನಿರ್ಧರಿಸಿದ್ದೇವೆ. ಅಪರಾಧ ಕೃತ್ಯದಲ್ಲಿ ಆರೋಪಿ ನೇರ ಪಾತ್ರ ಇರಬೇಕು ಅಂತೇನಿಲ್ಲ. ಪರೋಕ್ಷವಾಗಿ ಭಾಗಿಯಾಗಿದ್ದರೂ ಸಹ ಅಪರಾಧ ಕೃತ್ಯ ಆಗುತ್ತದೆ. ಸಿಎಂ ಪರೋಕ್ಷವಾಗಿ ಭಾಗಿಯಾಗಿದ್ದಕ್ಕೆ ಸಾಕ್ಷ್ಯ ಕೊಟ್ಟಿದ್ದೇವೆ. ಇದನ್ನೆಲ್ಲ ಪರಿಗಣಿಸಿ ನ್ಯಾಯಾಲಯವು ಈ ಆದೇಶ ಕೊಟ್ಟಿದೆ. ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯ ಮಾಡಲ್ಲ. ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ಕೊಡಬೇಕಾಗುತ್ತದೆ. ಆರೋಪಿ ಹೊತ್ತ ವ್ಯಕ್ತಿ ಸಿಎಂ ಸ್ಥಾನದಲ್ಲಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅವಮಾನ ಎಂದರು.

Published on: Sep 25, 2024 04:47 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More