ಮೈಸೂರು: ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಗಣಪತಿಗೆ 101 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದ ಅಭಿಮಾನಿಗಳು
ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ಒಕ್ಕಲಿಗ ಸಂಘ ಮತ್ತು ಕನ್ನಡಪರ ಸಂಘಟನೆಗಳು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿವೆ. 101 ತೆಂಗಿನಕಾಯಿ ಒಡೆದು, ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಮಾಡಲಾಯಿತು. ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಲಾಗಿದ್ದು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಲಾಗಿದೆ.
ಮೈಸೂರು, ನವೆಂಬರ್ 24: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇಗುಲದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು, ಅಖಿಲ ಕರ್ನಾಟಕ ಒಕ್ಕಲಿಗ ಸಂಘ ಮತ್ತು ಕನ್ನಡಪರ ಸಂಘಟನೆಗಳ ಸದಸ್ಯರು ಪೂಜೆಯಲ್ಲಿ ಭಾಗವಹಿಸಿದ್ದಾರೆ. ಡಿಕೆಶಿ ಸಿಎಂ ಆಗಲಿ ಎಂದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, 101 ತೆಂಗಿನಕಾಯಿಗಳನ್ನು ಒಡೆದು ಗಣಪತಿಗೆ ಹರಕೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಮಾತಿಗೆ ಬದ್ಧರಾಗಿ ಅಧಿಕಾರ ಬಿಟ್ಟುಕೊಡಬೇಕು ಎಂದು ಡಿಕೆ ಶಿವಕುಮಾರ್ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಈ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆಯನ್ನೂ ಒಕ್ಕಲಿಗ ಸಂಘಟನೆಗಳು ನೀಡಿವೆ.
