ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ

Updated on: Feb 05, 2026 | 12:29 PM

ಬೆಂಗಳೂರಿನ ಇಬ್ಬಲೂರು ಜಂಕ್ಷನ್‌ನಲ್ಲಿನ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಸೂಚನೆ ನೀಡಿದ್ದಾರೆ. ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದ್ದು, ವರ್ಷಗಳ ಬೇಡಿಕೆಯನ್ನು ಈಡೇರಿಸುವ ಭರವಸೆ ಮೂಡಿಸಿದೆ.

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ, ಅಸ್ತಿತ್ವದಲ್ಲಿರುವ ಮೇಲ್ಸೇತುವೆಯ ಸಾಮರ್ಥ್ಯ ಕಡಿಮೆ ಇರುವುದರಿಂದ ಹೆಚ್ಚುವರಿ ಮೇಲ್ಸೇತುವೆಯನ್ನು ನಿರ್ಮಿಸಲು ಅಥವಾ ಈಗಿರುವ ಮೇಲ್ಸೇತುವೆಯನ್ನು ವಿಸ್ತರಿಸಲು ನಿರ್ಧಾರ ಕೈಗೊಂಡಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us