ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ! ಆದ್ರೆ ಹೇಳಿದ್ದೇನು ಗೊತ್ತಾ? ಇಲ್ನೋಡಿ

Updated on: May 29, 2026 | 8:25 AM

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೊಳ್ಳುವ ಹಂತಕ್ಕೆ ಬಂದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ಈ ಯಾವ ಬೆಳವಣಿಗೆಗಳ ಬಗ್ಗೆಯೂ ಡಿಸಿಎಂ ಡಿಕೆ ಶಿವಕುಮಾರ್ ಈವರೆಗೆ ಮಾಧ್ಯಮಗಳ ಮುಂದೆ ತುಟಿಬಿಚ್ಚಿಲ್ಲ. ಆದರೆ, ಇದೀಗ ದೆಹಲಿಯಲ್ಲಿ ಮೊದಲ ಬಾರಿಗೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಆದರೆ ಹೇಳಿದ್ದು ಮಾತ್ರ ಬೇರೆಯೇ ವಿಚಾರ! ಅದೇನೆಂದು ಈ ವಿಡಿಯೋದಲ್ಲಿ ನೋಡಿ.

ನವದೆಹಲಿ, ಮೇ 29: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಡಿಕೆಶಿ ಈವರೆಗೂ ಮೌನವಾಗಿಯೇ ಇದ್ದರು. ಅಲ್ಲದೆ, ಯಾವುದೇ ರೀತಿಯ ಹೇಳಿಕೆ ನೀಡದಂತೆ ಬೆಂಬಲಿಗರಿಗೂ ಖಡಕ್ ಎಚ್ಚರಿಕೆ ನೀಡಿದ್ದರು. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಬಳಿ ಪತ್ರಕರ್ತರು, ‘ನೀವೇ ಮುಂದಿನ ಮುಖ್ಯಮಂತ್ರಿ ಆಗುತ್ತೀರಾ ಸರ್’ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅವರು, ಸದ್ಯಕ್ಕೆ ಹವಾಮಾನ ಸ್ವಲ್ಪ ತೊಂದರೆ ಕೊಡುತ್ತಿದೆ. ನಮ್ಮ ಸಿಎಂ ಸಿದ್ದರಾಮಯ್ಯ ಅವರು ಜೈಪುರದಲ್ಲಿ ಲ್ಯಾಂಡ್ ಆಗಿದ್ದಾರೆ. ಹವಾಮಾನದಲ್ಲಿ ಬಹಳಷ್ಟು ಪ್ರಕ್ಷುಬ್ಧತೆ ಇದೆ, ನಾವು ಅದನ್ನ ಮೊದಲು ನೋಡಬೇಕು’ ಎಂದು ಹೇಳಿದ್ದಾರೆ. ಆದರೆ, ಸಿಎಂ ವಿಚಾರವಾಗಿ ತುಟಿಪಿಟಿಕ್ ಅನ್ನಲಿಲ್ಲ. ಮತ್ತೊಂದೆಡೆ, ಸಿದ್ದರಾಮಯ್ಯ ಸುರಕ್ಷಿತವಾಗಿ ದೆಹಲಿ ತಲುಪಿದ್ದಾರೆ.

‘ಸದ್ಯಕ್ಕೆ ಸಿಎಂ ವಿಚಾರವಾಗಿ ಯಾವುದೇ ಹೇಳಿಕೆಗಳನ್ನು ನೀಡಬಾರದು. ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ ಶುರುವಾಗುವುದರಿಂದ ಅತ್ಯಂತ ಜಾಗರೂಕರಾಗಿ ಇರಬೇಕು. ಈಗ ಏನೇ ಹೇಳಿಕೆ ನೀಡಿದರೂ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಬಹುದು’ ಎಂದು ಡಿಕೆಶಿಗೆ ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಆ ಕಾರಣ ಅವರು ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಹೇಳಿಕೆ ನೀಡದೆ ಕೇವಲ ವಿಜಯದ ಸಂಕೇತ ತೋರಿಸುತ್ತಿದ್ದಾರೆ ಅಷ್ಟೇ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More