Bengaluru News: ಶಾಸಕರ‍್ಯಾರೂ ಸಚಿವರ ವಿರುದ್ಧ ಮುಖ್ಯಮಂತ್ರಿಗಳಿಗೆ ಬರೆದಿಲ್ಲ, ಅದೊಂದು ಸುಳ್ಳು ವದಂತಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 25, 2023 | 4:01 PM

ಸರ್ಕಾರದ ಘೋಷಿತ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಣ ವ್ಯಯಿಸಬೇಕಿರುವುದರಿಂದ ಶಾಸಕರ ಕ್ಷೇತ್ರಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡೋದು ಕಷ್ಟವಾಗುತ್ತಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಶಾಸಕರ ನಡುವೆ ಅಸಮಾಧಾನ ತಲೆದೋರಿದೆ, ಸಚಿವರ ವಿರುದ್ಧ ಸುಮಾರು 30 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ (Siddaramaiah) ಪತ್ರ ಬರೆದಿದ್ದಾರೆ ಎಂಬ ವರದಿಯನ್ನು ತಳ್ಳಿಹಾಕಿದರು. ವದಂತಿಗಳೆಲ್ಲ ಸುಳ್ಳು ಯಾರು ಯಾರ ವಿರುದ್ಧವೂ ಪತ್ರ ಬರೆದಿಲ್ಲ ಎಂದು ಹೇಳಿದ ಶಿವಕುಮಾರ್, ವಿಧಾನ ಸಭಾ ಅಧಿವೇಶನ (Assembly Session) ನಡೆಯುತ್ತಿದ್ದ ಕಾರಣ ಎಲ್ಲರೂ ಬ್ಯೂಸಿಯಾಗಿದ್ದರು ಅಲ್ಲದೆ ತಮ್ಮ ಸರ್ಕಾರ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಹೆಚ್ಚು ಗಮನ ನೀಡಿತ್ತು ಎಂದರು. ಸರ್ಕಾರದ ಘೋಷಿತ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಣ ವ್ಯಯಿಸಬೇಕಿರುವುದರಿಂದ ಶಾಸಕರ ಕ್ಷೇತ್ರಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡೋದು ಕಷ್ಟವಾಗುತ್ತಿದೆ. ಶಾಸಕರೆಲ್ಲ ತಲಾ 100, 200, 300 ಕೋಟಿ ರೂ.ಗಳ ಅನುದಾನ ಕೇಳುತ್ತಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಇದೊಂದು ವರ್ಷ ಅಭಿವೃದ್ಧಿ ಕಾಮಗಾರಿಗಳನ್ನು ಮುಂದೂಡುವಂತೆ ಹೇಳಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.