ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು

Updated on: Feb 27, 2026 | 11:50 AM

ಪಲಮನೇರುನಲ್ಲಿ ಜಿಮ್ ಸೇರಿದ ವಾರದಲ್ಲೇ ಯುವ ಅಧಿಕಾರಿಯೊಬ್ಬರು ವ್ಯಾಯಾಮದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಎಂಬುವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಇತ್ತೀಚೆಗೆ ಯುವಕರಲ್ಲಿ ಹೃದಯಾಘತ ಪ್ರಕರಣಗಳು ಹೆಚ್ಚುತ್ತಿದ್ದು, ಜಿಮ್ ಸೇರುವ ಮುನ್ನ ವೈದ್ಯಕೀಯ ತಪಾಸಣೆ ಹಾಗೂ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಚಿತ್ತೂರು, ಫೆ.27: ಆರೋಗ್ಯ ವೃದ್ಧಿಸಿಕೊಳ್ಳಲು ಜಿಮ್ ಸೇರಿದ್ದ ಯುವ ಅಧಿಕಾರಿಯೊಬ್ಬರು, ಸೇರಿದ ಕೇವಲ ಒಂದು ವಾರದಲ್ಲೇ ವ್ಯಾಯಾಮದ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಪಲಮನೇರು ಎಂಬಲ್ಲಿ ನಡೆದಿದೆ. ಮೃತರನ್ನು ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದ ಡಿಸಿಸಿ ಬ್ಯಾಂಕ್ (DCC Bank) ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ (Assistant Manager) ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಇಂದು ಬೆಳಿಗ್ಗೆ ವಿಶ್ವನಾಥ್ ಜಿಮ್‌ಗೆ ಹೋಗಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ತಮ್ಮ ಸ್ನೇಹಿತನಿಗೆ ಫೋನ್ ಮಾಡಿ ಜಿಮ್ ಬಳಿ ಬರುವಂತೆ ತಿಳಿಸಿದ್ದಾರೆ. ಸ್ನೇಹಿತ ಬಂದ ನಂತರ ಅಲ್ಲಿಯೇ ಎಳನೀರು ಕುಡಿದು ತುಸು ಚೇತರಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಎಳನೀರು ಕುಡಿದ ಕೆಲವೇ ಕ್ಷಣಗಳಲ್ಲಿ ವಿಶ್ವನಾಥ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಆಸ್ಪತ್ರೆಗೆ ತರುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಜಿಮ್ ಸೇರಿ ಕೇವಲ ಏಳು ದಿನಗಳಲ್ಲಿ ಈ ಘಟನೆ ನಡೆದಿರುವುದು ಜಿಮ್ ಪ್ರಿಯರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಜಿಮ್ ಸೇರುವ ಮುನ್ನ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನೂ ಓದಲು ಇಲ್ಲಿ ಇಲ್ಲಿ ಕ್ಲಿಕ್ ಮಾಡಿ

Follow Us