ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ

Updated on: Jun 10, 2026 | 11:07 AM

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಆರ್‌ಪಿಸಿ ಲೇಔಟ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಸಂಪುಟ ಪುನರ್‌ರಚನೆ ಮತ್ತು ತಮಗೆ ರಾಜ್ಯದ ಜವಾಬ್ದಾರಿ ಸಿಗುವ ವದಂತಿಗಳ ಕುರಿತು ಮಾತನಾಡಿದ ಅವರು, ವ್ಯಕ್ತಿಗಿಂತ ದೇಶ ದೊಡ್ಡದು, ಹೈಕಮಾಂಡ್ ಆದೇಶಕ್ಕೆ ತಲೆಬಾಗುವುದಾಗಿ ತಿಳಿಸಿದರು.

ಬೆಂಗಳೂರು, ಜೂನ್ 10: ನರೇಂದ್ರ ಮೋದಿ (Narendra Modi) ದೇಶದ ಪ್ರಧಾನಮಂತ್ರಿಯಾಗಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಐತಿಹಾಸಿಕ ಕ್ಷಣದಲ್ಲಿ, ಬೆಂಗಳೂರಿನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದ್ದಾರೆ. ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿರುವ ಪ್ರಸಿದ್ಧ ಸಂಕಷ್ಟಹರ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ಪ್ರಧಾನಿ ಮೋದಿಯವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಹಾಗೂ ದೇಶದ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಣ್ಣ, ಪ್ರಧಾನಿ ಮೋದಿಯವರ ಸುದೀರ್ಘ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ವೇಳೆ ವಿ. ಸೋಮಣ್ಣ ಅವರಿಗೆ ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಜವಾಬ್ದಾರಿ ಅಥವಾ ಹೆಚ್ಚಿನ ಹೊಣೆಗಾರಿಕೆ ವಹಿಸುವ ಸಾಧ್ಯತೆಗಳ ಕುರಿತು ಹರಿದಾಡುತ್ತಿರುವ ಸುದ್ದಿಗಳಿಗೆ ಸಚಿವರು ಪ್ರತಿಕ್ರಿಯೆ ನೀಡಿದರು. ಕರ್ನಾಟಕ ರಾಜಕಾರಣದಲ್ಲಿ ನಾನು ವಿವಿಧ ಹಂತಗಳಲ್ಲಿ ಸರಿಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ರಾಜಕೀಯ ಮಾಡಿದ್ದೇನೆ. ಆದರೆ ಸದ್ಯ ಹರಿದಾಡುತ್ತಿರುವ ಆ ರೀತಿಯ ಯಾವುದೇ ಹೊಸ ಜವಾಬ್ದಾರಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಬೆಳಗ್ಗೆ ಎದ್ದರೆ ಸಂಜೆಯವರೆಗೂ ಬರೀ ದೇಶ ಸುತ್ತುತ್ತಾ ನನ್ನ ಇಲಾಖೆಯ ಕೆಲಸಗಳಲ್ಲೇ ನಿರತನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು. ರಾಜಕೀಯ ನಿಲುವನ್ನು ಪುನರುಚ್ಚರಿಸಿದ ಸೋಮಣ್ಣ, ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದನ್ನು ನಮ್ಮ ಹಿರಿಯ ನಾಯಕರು ನಮಗೆ ಸದಾ ಮನವರಿಕೆ ಮಾಡಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಮಗೆ ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ಮಾತ್ರ ನನ್ನ ಕರ್ತವ್ಯ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More