ದೆಹಲಿ ಆಸ್ಪತ್ರೆಯಲ್ಲಿ ಶಿಬು ಸೊರೆನ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಹೇಮಂತ್ ಸೊರೆನ್ಗೆ ಸಾಂತ್ವನ
ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕೀಯದಿಂದ ದೂರವಿದ್ದ ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಅವರನ್ನು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಿಸಲಾಯಿತು. ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಶಿಬು ಸೊರೆನ್ ಅವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಇತ್ತೀಚೆಗೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರ ಸ್ಥಿತಿ ಹದಗೆಟ್ಟಿತು. ಕಳೆದ ಒಂದು ತಿಂಗಳಿನಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನವದೆಹಲಿ, ಆಗಸ್ಟ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಆಗಸ್ಟ್ 4) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ಜಾರ್ಖಂಡ್ನ ಮಾಜಿ ಸಿಎಂ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ (Shibu Soren) ಅವರ ಮೃತದೇಹಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಂದಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಬು ಸೊರೆನ್ ಇಂದು ಬೆಳಿಗ್ಗೆ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಿಬು ಸೊರೆನ್ ಅವರ ಮಗ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಸಾಂತ್ವನ ಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕೀಯದಿಂದ ದೂರವಿದ್ದ ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಅವರನ್ನು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಇತ್ತೀಚೆಗೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರ ಸ್ಥಿತಿ ಹದಗೆಟ್ಟಿತು. ಕಳೆದ ಒಂದು ತಿಂಗಳಿನಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿಬು ಸೊರೆನ್ 2004 ಮತ್ತು 2006ರ ನಡುವೆ ಮೂರು ಪ್ರತ್ಯೇಕ ಅವಧಿಗಳಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. 6 ಬಾರಿ ಲೋಕಸಭಾ ಸಂಸದರಾಗಿದ್ದ ಅವರು 1980ರಿಂದ 2005ರವರೆಗೆ ಸಂಸದರಾಗಿದ್ದರು. ಅವರು ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಪ್ರತ್ಯೇಕ ಜಾರ್ಖಂಡ್ ರಾಜ್ಯಕ್ಕಾಗಿ ನಡೆದ ಚಳವಳಿಯ ಮುಂಚೂಣಿಯಲ್ಲಿದ್ದ ಶಿಬು ಸೊರೆನ್ ಮೂರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದರೂ ಅವರ ಅಧಿಕಾರಾವಧಿಯು ರಾಜಕೀಯ ಪ್ರಕ್ಷುಬ್ಧತೆಯಿಂದ ಗುರುತಿಸಲ್ಪಟ್ಟಿದ್ದರಿಂದ ಅವರು 5 ವರ್ಷಗಳ ಪೂರ್ಣ ಅವಧಿಯನ್ನು ಎಂದಿಗೂ ಪೂರ್ಣಗೊಳಿಸಲಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

