ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ
ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು. ಈ ವೇಳೆ ತಮ್ಮ ತಂದೆ-ತಾಯಿಗೆ ಒಂದು ಬಾರಿ ಕರೆ ಮಾಡಿದ್ದಾಗಿ ಪ್ರಜ್ವಲ್ ಒಪ್ಪಿಕೊಂಡಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವನ್ನು ಮುಂದುವರಿಸಲಾಗಿದೆ. ಮೊಬೈಲ್ನಲ್ಲಿದ್ದ ಮಾಹಿತಿ ಕುರಿತು ತನಿಖೆ ಮುಂದುವರಿದಿದೆ.
ಬೆಂಗಳೂರು, ಸೆಪ್ಟೆಂಬರ್ 10: ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರಜ್ವಲ್ ರೇವಣ್ಣರನ್ನು ಎರಡು ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದರು. ವಿಚಾರಣೆ ಅವಧಿ ಮುಕ್ತಾಯಗೊಂಡ ನಂತರ, ಅವರನ್ನು ಗುರುವಾರ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಆದೇಶದಂತೆ, ಪ್ರಜ್ವಲ್ ರೇವಣ್ಣ ಹಾಗೂ ಪ್ರಕರಣದ ಮತ್ತೊಬ್ಬ ಆರೋಪಿ ಪ್ರತಾಪ್ ರಾಯ್ ಅವರ ನ್ಯಾಯಾಂಗ ಬಂಧನವನ್ನು ಮುಂದುವರಿಸಲಾಗಿದೆ.
ಪೊಲೀಸ್ ವಿಚಾರಣೆ ವೇಳೆ, ಪ್ರಜ್ವಲ್ ರೇವಣ್ಣ ಜೈಲಿನಿಂದಲೇ ತಮ್ಮ ತಂದೆ ರೇವಣ್ಣ ಮತ್ತು ತಾಯಿ ಭವಾನಿ ಅವರಿಗೆ ಕರೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಕೇವಲ ಒಂದು ಬಾರಿ ಮಾತ್ರ ಕರೆ ಮಾಡಿದ್ದೆ ಎಂದು ಪ್ರಜ್ವಲ್ ಹೇಳಿಕೊಂಡಿದ್ದಾರೆ. ಜೈಲಿನ ಬ್ಯಾರಕ್ನಲ್ಲಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಬಳಿಕ ದಾಖಲಾದ ಪ್ರಕರಣದಲ್ಲಿ ಪ್ರತಾಪ್ ರಾಯ್ ಎ-1 ಆಗಿದ್ದರೆ, ಪ್ರಜ್ವಲ್ ರೇವಣ್ಣ ಎ-2 ಆರೋಪಿಯಾಗಿದ್ದಾರೆ. ಮೊಬೈಲ್ನಲ್ಲಿರುವ ವಿಡಿಯೋಗಳು ಮತ್ತು ಚಾಟಿಂಗ್ ಕುರಿತು ತನಿಖೆ ನಡೆಯುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

