ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ; ಜಿಲ್ಲಾ ಎಸ್‌ಟಿ ಕಲ್ಯಾಣಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರ ಮುತ್ತಿಗೆ

Updated on: Aug 06, 2026 | 12:55 PM

ರಾಯಚೂರಿನ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿನಿಯರು ಮೂಲಭೂತ ಸೌಲಭ್ಯಗಳ ಕೊರತೆ ಖಂಡಿಸಿ ಜಿಲ್ಲಾ ಎಸ್​ಟಿ ಕಲ್ಯಾಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಿಯಾದ ಊಟ, ಸ್ವಚ್ಛತೆ, ನೈರ್ಮಲ್ಯ ಕಿಟ್‌ಗಳ ಕೊರತೆ, ವೈದ್ಯಕೀಯ ನೆರವು ಸಿಗದಿರುವುದು ಮತ್ತು ಪ್ರವೇಶಾತಿ ವಿಳಂಬದ ಬಗ್ಗೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು, ಆ,6: ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿನಿಯರು ಮೂಲಭೂತ ಸೌಲಭ್ಯಗಳ ಕೊರತೆ ಖಂಡಿಸಿ ಜಿಲ್ಲಾ ಎಸ್​ಟಿ ಕಲ್ಯಾಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಊಟ, ಸ್ವಚ್ಛತೆ, ಮತ್ತು ಅಗತ್ಯ ವಸ್ತುಗಳ ಕೊರತೆಯ ಬಗ್ಗೆ ವಿದ್ಯಾರ್ಥಿನಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರು ನೀಡಿದ ಮಾಹಿತಿಯ ಪ್ರಕಾರ, ಹಾಸ್ಟೆಲ್‌ನಲ್ಲಿ ಸರಿಯಾದ ಊಟ ಸಿಗುತ್ತಿಲ್ಲ. ಕೊಳೆತ ತರಕಾರಿಗಳನ್ನೇ ಬಳಸಿ ಅಡುಗೆ ಮಾಡಲಾಗುತ್ತಿದೆ. ಕಳೆದ ನಾಲ್ಕು ತಿಂಗಳಿಂದ ಸೋಪ್ ಕಿಟ್ ಮತ್ತು ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಿಲ್ಲ. ಹಾಸಿಗೆಗಳ ಕೊರತೆಯಿಂದಾಗಿ ಕೆಲ ವಿದ್ಯಾರ್ಥಿನಿಯರು ನೆಲದ ಮೇಲೆ ಮಲಗುವ ಸ್ಥಿತಿ ಎದುರಾಗಿದೆ. ವಾಶ್‌ರೂಮ್‌ಗಳು ಸ್ವಚ್ಛವಾಗಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲೂ ಸೂಕ್ತ ನೆರವು ದೊರೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ. ಪ್ರಥಮ ವರ್ಷದ ವಿದ್ಯಾರ್ಥಿನಿಯರ ಪ್ರವೇಶಾತಿಯಲ್ಲಿಯೂ ವಿಳಂಬ ಮಾಡಲಾಗುತ್ತಿದೆ ಎಂದು ದೂರಲಾಗಿದೆ. ತಮ್ಮ ಸಮಸ್ಯೆಗಳ ಬಗ್ಗೆ ವಾರ್ಡನ್ ಮತ್ತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಈ ಬೆಳವಣಿಗೆಗಳ ನಂತರ, ಜಿಲ್ಲಾಧಿಕಾರಿಗಳು ರಾಯಚೂರಿನ ಸರ್ಕಾರಿ ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿ ಪರಿಶೀಲನೆ ನಡೆಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us