ಸಿಎಂ ಡಿಕೆ ಶಿವಕುಮಾರ್ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿಚಾರ ಅಂತಿಮವಾಗಿ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಕೂಡ ರಾಮಲಿಂಗಾರೆಡ್ಡಿ ಅವರ ನಿರ್ಧಾರವನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಹೀಗಾಗಿ, ರಾಜೀನಾಮೆ ತಿರಸ್ಕೃತಗೊಂಡಿದ್ದು, ಸಚಿವರು ಪಕ್ಷದ ಶಿಸ್ತಿಗೆ ಬದ್ಧರಾಗಿ ಮುಂದುವರಿಯಲಿದ್ದಾರೆ.
ಬೆಂಗಳೂರು, ಜೂ.6 : ನೂತನ ಸಚಿವರಾದ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಜಟಾಪಟಿಯು ಬಹುತೇಕ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನೆನ್ನೆ ರಾತ್ರಿ ನಾನು ಮತ್ತು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದೆವು. ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ತಗೊಳ್ಳೋದಿಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷ ಕಾಲ ನಮ್ಮ ಜೊತೆ ಇದ್ದು ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ” ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜೀನಾಮೆಯನ್ನು ಸ್ವೀಕರಿಸದಿರುವುದರಿಂದ ಅದು ತಿರಸ್ಕೃತಗೊಂಡಿದೆ ಎಂದೇ ಅರ್ಥ. ಖಾತೆ ವಿಚಾರದ ಬಗ್ಗೆ ಮುಂದಕ್ಕೆ ಮುಖ್ಯಮಂತ್ರಿಗಳು ಮತ್ತು ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಯಾವುದೇ ನಿರ್ದಿಷ್ಟ ಬೇಡಿಕೆಗಳನ್ನು ಇಟ್ಟಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಣ್ದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಿರಿಯ ನಾಯಕರು ತಮ್ಮ ನಿರ್ಧಾರವನ್ನು ವಾಪಸ್ ಪಡೆಯುವಂತೆ ಕರೆ ಮಾಡಿ ಮನವಿ ಮಾಡಿದ್ದರು ಎಂದು ರೆಡ್ಡಿ ವಿವರಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ತಾವು ವರಿಷ್ಠರ ಮಾತಿಗೆ ಬದ್ಧರಾಗಿರುವುದಾಗಿ ತಿಳಿಸುವ ಮೂಲಕ ರಾಜೀನಾಮೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
