ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು

Updated on: Aug 18, 2026 | 2:23 PM

Pavitra Gowda Health: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಅನಾರೋಗ್ಯದ ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಗೈರಾಗಿದ್ದಾರೆ. ಜ್ವರ ಮತ್ತು ಬಿಪಿ ಕಡಿಮೆಯಿರುವ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮತ್ತು ಹುಷಾರಾದ ಮೇಲಷ್ಟೇ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಗ್ಯಾಂಗ್‌ನ ಪ್ರಮುಖ ಆರೋಪಿ ಪವಿತ್ರಾಗೌಡ ಅನಾರೋಗ್ಯದ ಕಾರಣದಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಬೇಕಿದ್ದ ವಿಚಾರಣೆಗೆ ಅವರು ಹಾಜರಾಗಿಲ್ಲ. ಪವಿತ್ರಾಗೌಡ ಅವರಿಗೆ ಜ್ವರ ಬಂದಿದ್ದು, ರಕ್ತದೊತ್ತಡ (ಬಿಪಿ) ಕೂಡ ಕಡಿಮೆಯಾಗಿದೆ ಎಂದು ಮಹಿಳಾ ಬ್ಯಾರಕ್ ಅಧಿಕಾರಿಗಳು ನ್ಯಾಯಾಧೀಶರಿಗೆ ಮಾಹಿತಿ ನೀಡಿದ್ದಾರೆ.

ಪವಿತ್ರಾಗೌಡ ಅವರ ಆರೋಗ್ಯ ಸ್ಥಿತಿಯ ಬಗ್ಗೆ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರಿದ್ದ ನ್ಯಾಯಪೀಠ ತೀವ್ರ ಕಳಕಳಿ ವ್ಯಕ್ತಪಡಿಸಿದೆ. ಜೈಲಿನ ಆಸ್ಪತ್ರೆಯಲ್ಲಿ ಈಗಾಗಲೇ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ಕೋರ್ಟ್‌ಗೆ ತಿಳಿಸಿದ್ದಾರೆ. ಇದೇ ವೇಳೆ ಪವಿತ್ರಾಗೌಡ ಪರ ವಕೀಲರು ಸೂಕ್ತ ವೈದ್ಯಕೀಯ ಸೌಲಭ್ಯ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಚಿಕಿತ್ಸೆಯನ್ನು ತಕ್ಷಣವೇ ಒದಗಿಸುವಂತೆ ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಪವಿತ್ರಾಗೌಡ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಹುಷಾರಾದ ಮೇಲಷ್ಟೇ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಬೇಕು ಎಂದು ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us