ಅಥಣಿಯಲ್ಲಿ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಪಾರು
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಅವರು ಭೀಕರ ರಸ್ತೆ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕಸ ವಿಲೇವಾರಿ ವಾಹನದ ನಿರ್ಲಕ್ಷ್ಯದ ಚಾಲನೆಯಿಂದ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅವರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿ , ಸೆ.1: ಆರ್ಎಸ್ಎಸ್ (RSS) ಹಿರಿಯ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಅವರು ಭೀಕರ ರಸ್ತೆ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ದೃಶ್ಯವು ಸಮೀಪದ ಮನೆಯೊಂದರ ಸಿಸಿಟಿವಿ (CCTV) ಕೆಮರಾದಲ್ಲಿ ಸೆರೆಯಾಗಿದೆ. ಅರವಿಂದ್ ರಾವ್ ದೇಶಪಾಂಡೆ ಅವರು ರಸ್ತೆ ಬದಿಯಲ್ಲಿ ನಿಂತಿದ್ದ ಕಾರೊಂದರಲ್ಲಿದ್ದ ವ್ಯಕ್ತಿಯ ಜೊತೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಅತಿಯಾದ ವೇಗದಿಂದ ಏಕಾಏಕಿ ನುಗ್ಗಿ ಬಂದ ಅಥಣಿ ಪುರಸಭೆಯ ಕಸ ವಿಲೇವಾರಿ ವಾಹನವು ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಕಾರಿಗೆ ಡಿಕ್ಕಿಯಾಗುತ್ತಿದ್ದಂತೆಯೇ ಅರವಿಂದ್ ರಾವ್ ಅವರು ಸಮಯಪ್ರಜ್ಞೆಯಿಂದ ಪಕ್ಕಕ್ಕೆ ಸರಿದಿದ್ದರಿಂದ ಭಾರಿ ಅನಾಹುತ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬೆನ್ನಲ್ಲೇ ಜಮಾಯಿಸಿದ ಸ್ಥಳೀಯರು ಕಸ ವಿಲೇವಾರಿ ವಾಹನದ ಚಾಲಕನ ನಿರ್ಲಕ್ಷ್ಯದ ಚಾಲನೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆದಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ