ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Edited By:

Updated on: May 27, 2026 | 2:03 PM

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯಲ್ಲೇ ಸರ್ಕಾರ ಮುಳುಗಿದೆ ಎಂದು ಟೀಕಿಸಿದ ಅವರು, ಬರಗಾಲ, ನೆರೆ, ಬೆಂಗಳೂರು ಸಮಸ್ಯೆಗಳತ್ತ ಗಮನ ಹರಿಸುವ ಬದಲು ಕುರ್ಚಿಗಾಗಿ ಹೋರಾಟ ನಡೆಸುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದೂ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದೇವನಹಳ್ಳಿ, ಮೇ 27: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಬಿಕ್ಕಟ್ಟು ಮತ್ತು ಆಡಳಿತದ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಐಎಬಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಎರಡುವರೆ ವರ್ಷ ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೇ ಚರ್ಚೆ ನಡೆಸಿದೆ. ಬರಗಾಲ, ನೆರೆಹಾವಳಿ, ಬೆಂಗಳೂರಿನಲ್ಲಿ ತ್ಯಾಜ್ಯ ಹಗರಣದಂತಹ ಗಂಭೀರ ಸಮಸ್ಯೆಗಳಿದ್ದರೂ, ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡದಿರುವುದು, ಇಲಾಖೆಗಳು ಕೆಲಸ ಮಾಡದಿರುವುದು ಮತ್ತು ಇಲಾಖೆಗಳಿಗೆ ಹಣಕಾಸಿನ ಕೊರತೆ ಇರುವುದು ರಾಜ್ಯದ ದುಸ್ಥಿತಿಗೆ ಕಾರಣ ಎಂದು ಕರಂದ್ಲಾಜೆ ಹೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಖಚಿತತೆ ಇಲ್ಲ, ಏಕೆಂದರೆ ಅವರು ಹಳೆಯ ಹುಲಿಯಾಗಿದ್ದು, ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಕುರ್ಚಿ ಹೋರಾಟವನ್ನು ನಿಲ್ಲಿಸಿ, ಜನರ ಸಮಸ್ಯೆಗಳ ಕಡೆ ತಕ್ಷಣ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us