ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Jul 01, 2024 | 5:45 PM

ದೆಹಲಿಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ರಾಜ್ಯದ ಮಂತ್ರಿಗಳ ಜೊತೆ ಸಭೆ ಮತ್ತು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿಗೆ ವಾಪಸ್ಸು ಬಂದ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್-ಇಬ್ಬರೂ ಮಾಧ್ಯಮಗಳೊಂದಿಗೆ ಎಂದಿನ ಲವಲವಿಕೆಯಿಂದ ಮಾತಾಡುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಳಿತದ ಬಗ್ಗೆ ಕ್ಲಾಸ್ ಏನಾದರೂ ತೆಗೆದುಕೊಂಡರೇ?

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿಯನ್ನು ನಡೆಸಿ ಮಾತಾಡಿದ ಅವರು ಇವತ್ತು ಸುಮಾರು 250 ಪದಾಧಿಕಾರಿಗಳನ್ನು ಕರೆಸಿ ಮಾತಾಡಲಾಗಿದೆ ಮತ್ತು ಎಲ್ಲರಿಗೂ ಅವರವರ ಜವಾಬ್ದಾರಿಗಳನ್ನು ವಹಿಸಿಕೊಡಲಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಸಾಮಾನ್ಯ ಸಭೆಯನ್ನು ಕರೆಯುವ ಮೊದಲು ಮತ್ತೆರಡು ಸಭೆಗಳನ್ನು ನಡೆಸಲಾಗುವುದು ಎಂದು ಶಿವಕುಮಾರ್ ಹೇಳಿದರು. ಹೆಚ್ಚುವರಿ ಉಪ ಮುಖ್ಯಮಂತ್ರಿಗಳು ಬೇಕೆಂದು ಕೇಳುತ್ತಿರುವವರಿಗೆ ಸೂಚನೆ ಏನಾದರೂ ನೀಡಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಅನ್ಯಮನಸ್ಕರಾಗಿ ಉತ್ತರ ನೀಡಿದ ಶಿವಕುಮಾರ್ ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಹೇಳಿದರು. ಅಸಲಿಗೆ, ಸಹಕಾರ ಸಚಿವ ಕೆಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೋಟೀಸ್ ಜಾರಿಯಾದ ನಂತರವೂ ಹೆಚ್ಚುವರಿ ಡಿಸಿಎಂಗಳು ಬೇಕೆಂದು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ನಾನು ಹೇಳಿದ್ದು, ಸಮುದಾಯದ ಪ್ರಸ್ತಾಪ ಮಾಡಿಲ್ಲ: ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.