AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ

ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ

ಅಕ್ಷಯ್​ ಪಲ್ಲಮಜಲು​​
|

Updated on:Mar 31, 2026 | 9:44 PM

Share

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಬಡವರ, ದಲಿತರ ಹಾಗೂ ಅಲ್ಪಸಂಖ್ಯಾತರ ಕಷ್ಟಗಳನ್ನು ಅರ್ಥಮಾಡಿಕೊಂಡಿಲ್ಲ ಎಂದು ಟೀಕಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಭಾಗವಹಿಸಿಲ್ಲ, ಬ್ರಿಟಿಷರೊಂದಿಗೆ ಸೇರಿಕೊಂಡಿತ್ತು ಎಂದು ಆರೋಪಿಸಿದರು. ಜೊತೆಗೆ, ಅಪ್ಪರ್ ಕೃಷ್ಣ ಯೋಜನೆ ಹಾಗೂ ರೈತರಿಗೆ ಪರಿಹಾರ ನೀಡುವಲ್ಲಿ ಬಿಜೆಪಿ ವೈಫಲ್ಯವನ್ನು ಎತ್ತಿ ತೋರಿಸಿದರು.

ಬಾಗಲಕೋಟೆ, ಮಾ.31: ಉಪಚುನಾವಣೆ ಹಿನ್ನೆಲೆಯಲ್ಲಿ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯವರಿಗೆ ಬಡವರ, ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಳಕಳಿ ಅಥವಾ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಬಿಜೆಪಿಯು ಬಡವರ ವಿರೋಧಿಗಳು ಮತ್ತು ಮಹಿಳೆಯರ ವಿರೋಧಿಗಳು ಎಂದು ಸಿಎಂ ಬಣ್ಣಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿದರು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ನಗರಪಾಲಿಕೆಗಳಲ್ಲಿ ಇವತ್ತು 50% ಮೀಸಲಾತಿ ಜಾರಿಯಲ್ಲಿದ್ದರೆ, ಅದಕ್ಕೆ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಂದ 73ನೇ ಮತ್ತು 74ನೇ ತಿದ್ದುಪಡಿಗಳೇ ಕಾರಣ ಎಂದು ಅವರು ಹೇಳಿದರು. ಬಿಜೆಪಿ ಯವರಿಗೆ ಬಡವರ ಕಷ್ಟ ಸುಖ ಗೊತ್ತಿಲ್ಲ ಎಂದು ಪ್ರತಿಪಾದಿಸಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಪಕ್ಷದ ಪಾತ್ರದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಎತ್ತಿದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಬಿಜೆಪಿ ಎಂದಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತೇ ಎಂದು ಅವರು ಕೇಳಿದರು. 1925ರಲ್ಲಿ ಆರ್.ಎಸ್.ಎಸ್ ಉದ್ಭವವಾಗಿದ್ದರೂ, ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಭಾಗವಹಿಸಿರಲಿಲ್ಲ ಎಂದು ಅವರು ಆರೋಪಿಸಿದರು. ಬದಲಾಗಿ, ಬಿಜೆಪಿಯವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು. ಬ್ರಿಟಿಷರನ್ನು ಈ ದೇಶದಿಂದ ತೊಲಗಿಸಿದವರು ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್‌ನವರು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷವು ಇಂದಿರಾ ಗಾಂಧಿ, ನೆಹರು, ರಾಜೀವ್ ಗಾಂಧಿ, ನರಸಿಂಹರಾವ್ ಮತ್ತು ಮನ್ಮೋಹನ್ ಸಿಂಗ್ ಅವರ ಕಾಲದಿಂದಲೂ ದೇಶದಲ್ಲಿ ಜಾತಿ ಪದ್ಧತಿ, ಬಡತನ, ನಿರುದ್ಯೋಗ ಮತ್ತು ಅನಕ್ಷರತೆ ನಿವಾರಣೆಗೆ ಸತತವಾಗಿ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ವಿಧಾನದ ಬಗ್ಗೆಯೂ ಸಿಎಂ ಟೀಕಿಸಿದರು. ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದ ಮೂಲಕ ನೇರವಾಗಿ ಅಧಿಕಾರಕ್ಕೆ ಬರಲಿಲ್ಲ ಎಂದು ಅವರು ಹೇಳಿದರು. 2008ರಲ್ಲಿ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ 110 ಸ್ಥಾನಗಳನ್ನು ಮಾತ್ರ ಗೆದ್ದಿದ್ದರು. ನಂತರ ಜಗದೀಶ್ ಶೆಟ್ಟರ್ ಮತ್ತು ಸದಾನಂದ ಗೌಡರು ಮುಖ್ಯಮಂತ್ರಿಗಳಾದರು. ಈ ಮೂವರೂ ಮುಖ್ಯಮಂತ್ರಿಗಳಾದರೂ ಯಾವುದೇ ಗಣನೀಯ ಕೆಲಸ ಮಾಡಲಿಲ್ಲ ಎಂದು ಸಿಎಂ ಆರೋಪಿಸಿದರು. 2019ರಲ್ಲಿ ಮತ್ತೆ ಅಧಿಕಾರಕ್ಕೆ ಬಂದರೂ, ನಾಲ್ಕು ವರ್ಷ ಅಧಿಕಾರದಲ್ಲಿದ್ದುಕೊಂಡು ಯಾವುದೇ ಪ್ರಮುಖ ಕೆಲಸ ಮಾಡಲಿಲ್ಲ ಎಂದು ದೂರಿದರು. ನಿರ್ದಿಷ್ಟವಾಗಿ, ಅಪ್ಪರ್ ಕೃಷ್ಣ ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದರು. 2010ರಲ್ಲಿ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬಂದಿದ್ದರೂ, ಕಳೆದ 13 ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ (ಡಬಲ್ ಇಂಜಿನ್ ಸರಕಾರ) ಈ ಕೆಲಸವನ್ನು ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ರೈತರು ಜಮೀನು ಕಳೆದುಕೊಂಡಿದ್ದರೂ ಅವರಿಗೆ ಪರಿಹಾರವನ್ನೂ ನೀಡಿಲ್ಲ. ತಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ, ಸಚಿವ ಎಸ್.ಆರ್. ನಾಯಕ್, ಎಸ್.ಆರ್. ಪಾಟೀಲ್, ತಿಮ್ಮಾಪುರ, ಶಿವಾನಂದ ಪಾಟೀಲ್ ಅವರೊಂದಿಗೆ ಸೇರಿ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡಲು ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ, ಒಣ ಜಮೀನಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, 16 ಮಂದಿಗೆ ಈಗಾಗಲೇ ಚೆಕ್‌ಗಳನ್ನು ನೀಡಲಾಗಿದೆ ಎಂದರು. ಬಿಜೆಪಿ ಯವರು ಇದನ್ನು ಮಾಡಿಲ್ಲ, ಹಾಗಾಗಿ ಅವರಿಗೆ ಮತ ನೀಡಬಾರದು ಎಂದು ಸಿದ್ದರಾಮಯ್ಯ ಜನರಿಗೆ ಕರೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 31, 2026 09:43 PM
Follow Us