ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು?
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದ ಎಂಜಿನ್ನಲ್ಲಿ ಟೇಕಾಫ್ ವೇಳೆ ಹೊಗೆ ಕಾಣಿಸಿಕೊಂಡು ದೊಡ್ಡ ಅನಾಹುತ ತಪ್ಪಿದೆ. ಪೈಲಟ್ ತಕ್ಷಣ ವಿಮಾನ ನಿಲ್ಲಿಸಿದ್ದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಸ್ಥಳಾಂತರಗೊಂಡರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತಾಂತ್ರಿಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ಗಾಗಿ ರನ್ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಸುರಕ್ಷಿತವಾಗಿ ಇಳಿಸಿ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

