ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿದ್ದು, ರಾತ್ರಿ 8 ಗಂಟೆಯಾದರೂ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರಕ್ಕೆ ನುಗ್ಗಲು ಯತ್ನಿಸಿ ಹೈಡ್ರಾಮಾ ನಡೆಯಿತು.
ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಸಂಘರ್ಷ ಏರ್ಪಟ್ಟಿದೆ.
ಮತ ಎಣಿಕೆ ಕೇಂದ್ರದ ಬಳಿ ಹೈಡ್ರಾಮಾ
ಚಿಕ್ಕಮಗಳೂರು ನಗರದ ಐಡಿಎಸ್ಜಿ (IDSG) ಕಾಲೇಜಿನಲ್ಲಿ ಮರು ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ, ರಾತ್ರಿ 8 ಗಂಟೆಯಾದರೂ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಎಣಿಕೆ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕಾರ್ಯಕರ್ತರು, ಪ್ರಕ್ರಿಯೆ ತಡವಾಗಲು ಕಾರಣವೇನು ಎಂದು ಪ್ರಶ್ನಿಸಿದರು. ಅಲ್ಲದೆ, ಒಳ ಬಿಡದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
ರಸ್ತೆಗಿಳಿದ ಕಾಂಗ್ರೆಸ್ – ರಾಷ್ಟ್ರೀಯ ಹೆದ್ದಾರಿ ಬಂದ್
ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ‘ಗೆದ್ದರು ಗೆದ್ದರು ರಾಜೇಗೌಡ’ ಎಂದು ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿ 173ರಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎರಡೂ ಪಕ್ಷಗಳ ಕಾರ್ಯಕರ್ತರ ಘೋಷಣೆ ಮತ್ತು ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.
ವಿವರಗಳಿಗೆ ಓದಿ: ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

